ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಶ್ರಮಿಕ ವರ್ಗದ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಬೆಳಗಾವಿ ಜಿಲ್ಲೆಯ ಅಸಂಘಟಿತ ವಲಯದ ಸುಮಾರು 10.20 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ‘ಇ-ಶ್ರಮ್’ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಿಕೊಂಡು ಸರ್ಕಾರದ ವಿವಿಧ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತೆಗೆ ಸಂಬoದಿಸಿದಂತೆ ಕೇಳಿದ ಪ್ರಶ್ನೆಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.
ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ ಬೆಳಗಾವಿ ಜಿಲ್ಲೆಯ ಕಾರ್ಮಿಕರು ವಿವಿಧ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಪ್ರಮುಖವಾಗಿ ಆಯುಷ್ಮಾನ್ ಭಾರತ್ 3,77,920 ಫಲಾನುಭವಿಗಳು, ವಿಬಿ ಜಿ- ರಾಮ್ ಜಿ ಗ್ರಾಮೀಣ್ 2,72,136 ಫಲಾನುಭವಿಗಳು, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ 1,58,333 ಫಲಾನುಭವಿಗಳು, ಒನ್ ನೇಷನ್ ಒನ್ ರೇಷನ್ ಕಾರ್ಡ್ 73,381 ಫಲಾನುಭವಿಗಳು ನೋಂದಾಯಿಸಿಕೊಂಡು ಸರ್ಕಾರದ ವಿವಿಧ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ ಎಂದರು.
ಕಟ್ಟಡ ನಿರ್ಮಾಣ ಕಾರ್ಮಿಕರು, ಕಬ್ಬು ಕಟಾವು ಮಾಡುವವರು ಮತ್ತು ಮನೆ ಕೆಲಸದವರ ಶ್ರಮಕ್ಕೆ ಗೌರವ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ಇ-ಶ್ರಮ್ ಪೋರ್ಟಲ್ ಮೂಲಕ ಅವರಿಗೆ ಕೇವಲ ಆರ್ಥಿಕ ಭದ್ರತೆಯಷ್ಟೇ ಅಲ್ಲದೆ, ‘ಸ್ಕಿಲ್ ಇಂಡಿಯಾ’ ಮೂಲಕ ಕೌಶಲ್ಯಾಭಿವೃದ್ಧಿ ಮತ್ತು ‘ನ್ಯಾಷನಲ್ ಕರಿಯರ್ ಸರ್ವಿಸ್’ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ, ಎಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ ಅವರು ವಿವರಿಸಿದ್ದಾರೆ


