ಸಮಾಜದ ಒಗ್ಗಟ್ಟಿಗೆ ಜಯಂತಿ ಆಚರಣೆ ಪೂರಕ : ಮೇಯರ್ ಪಿ.ಗಾದೆಪ್ಪ

Sandeep Malannavar
ಸಮಾಜದ ಒಗ್ಗಟ್ಟಿಗೆ ಜಯಂತಿ ಆಚರಣೆ ಪೂರಕ : ಮೇಯರ್ ಪಿ.ಗಾದೆಪ್ಪ
WhatsApp Group Join Now
Telegram Group Join Now
ಬಳ್ಳಾರಿ,ಫೆ.16 – ಮಹನೀಯರ ಜಯಂತಿಗಳು ಕೇವಲ ಆಚರಣೆಗಳಲ್ಲ, ಅವು ಸಮಾಜದ ಒಗ್ಗಟ್ಟು ಮತ್ತು ಶಕ್ತಿಯನ್ನು ಪ್ರದರ್ಶಿಸುವ ಸಂಕೇತಗಳಾಗಿವೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.
ಭಾನುವಾರ, ನಗರದ‌ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ‌ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಹಿರಿಯರು ಮತ್ತು ಮುಖಂಡರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದು ಮುಖ್ಯ. ಮಹನೀಯರ ಸಂದೇಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.‌ ಈ ಬಾರಿ ಮಹಾನಗರ ಪಾಲಿಕೆಯ ಅನುದಾನದಡಿ ಸುಮಾರು 28 ವಿವಿಧ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಶಾಸಕರು ಮತ್ತು ಪಾಲಿಕೆಯ ಎಲ್ಲಾ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.

ಸಮಾಜದ ಸರ್ವತೋಮುಖ ಅಭಿವೃದ್ಧಿ ಹಾಗೂ ಇಂತಹ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಯಶಸ್ಸಿಗಾಗಿ ಪಾಲಿಕೆಯ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಗ್ಯಾರಂಟಿ‌ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾದ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದರು ಎಂದರು.
ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ‌ ಸದಸ್ಯ ಪ್ರೊ.ಎಸ್.ಶಾಂತನಾಯ್ಕ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣವೊಂದೇ ಅಸ್ತ್ರ. ನಮ್ಮ ಮಕ್ಕಳು ಕೇವಲ ಸಾಂಪ್ರದಾಯಿಕ ಪದವಿಗಳಿಗೆ ಅಂಟಿಕೊಳ್ಳದೆ ವಿಜ್ಞಾನ, ತಂತ್ರಜ್ಞಾನ ಮತ್ತು ಇಂಗ್ಲಿಷ್ ಭಾಷೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಬ್ರಿಟಿಷರ ವಿರುದ್ಧ ನಿರಂತರವಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಗುಜರಾತ್ ಗಡಿಯ ವೀರ ಗುರು ಗೋವಿಂದ ಬಂಜಾರ ಅವರ ಅಪ್ರತಿಮ ಹೋರಾಟ ಇಂದಿನ ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ ಎಂಬ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು.
ನಮ್ಮ ಪೂರ್ವಜರ ಸಾಧನೆಯನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಜಗತ್ತು ವಿಜ್ಞಾನದತ್ತ ಮುಖ ಮಾಡಿರುವಾಗ ನಮ್ಮ ಮಕ್ಕಳು ಸಹ ಮುಂದರಿಯಬೇಕು ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಡಿ.ಸಂಧ್ಯಾರಾವ್ ತಂಡ ಭಕ್ತಿ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ‌ ಸಂದರ್ಭದಲ್ಲಿ‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮುದಾಯದ ಮುಖಂಡರು ಸೇರಿದಂತೆ ಸಾರ್ವಜನಿಕರು ಇದ್ದರು.
WhatsApp Group Join Now
Telegram Group Join Now
Share This Article