ಬೆಂಗಳೂರು, ನವೆಂಬರ್ 10: ಯಲಹಂಕ ಬಳಿಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಜ್ಯ ಸರ್ಕಾರ ಐದು ಎಕರೆ ವಿಸ್ತೀರ್ಣದಲ್ಲಿ ಅಂತರರಾಷ್ಟ್ರೀಯ ಹೂವಿನ ಮಾರ್ಕೆಟ್ ಮಾಡಲು ಮುಂದಾಗಿದೆ. ಆದರೆ ಇದಕ್ಕೆ ವಿದ್ಯಾರ್ಥಿಗಳು ಮತ್ತು ಪರಿಸರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತೋಟಗಾರಿಕಾ ಇಲಾಖೆಯಿಂದ ಜಿಕೆವಿಕೆ ಕ್ಯಾಂಪಸ್ ನಲ್ಲಿ ಇಂಟರ್ನ್ಯಾಷನಲ್ ಫ್ಲವರ್ ಮಾರ್ಕೆಟ್ ಓಪನ್ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಇದಕ್ಕೆ ತೋಟಗಾರಿಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಮತ್ತು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೂವಿನ ಮಾರುಕಟ್ಟೆಗಾಗಿ ಇಲಾಖೆ 942 ಮರಗಳ ಮಾರಣ ಹೋಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಮರಗಳನ್ನು ಕಡಿಯಬಾರದೆಂದು ಪರಿಸರವಾದಿಗಳು ಹೋರಾಟ ನಡೆಸುತ್ತಿದ್ದಾರೆ. ಆದರೆ ನವೆಂಬರ್ 3 ರಂದು ಎಪಿಎಂಸಿಯ ಅಧಿಕಾರಿಗಳು, ನಬಾರ್ಡ್ (ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್) ಅಧಿಕಾರಿಗಳು ಕ್ಯಾಂಪಸ್ಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ವಿರೋಧಿಸಿರುವ ವಿದ್ಯಾರ್ಥಿಗಳು ಇಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


