ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಗರಣಗಳ ಹುತ್ತ ಕಟ್ಟಿಕೊಂಡಿದ್ದು, ಇದರ ವಿರುದ್ಧ ಸಮರ್ಥವಾಗಿ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲ ನಾಯಕರ ಅಭಿಪ್ರಾಯ ಆಲಿಸಿ ಉಭಯ ಸದನಗಳಲ್ಲಿಯೂ ಸಮಾನ ರೀತಿಯ ಹೋರಾಟ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ನಿರ್ಧಾರ ಮಾಡಲಾಯಿತು.
ಮೊದಲ ದಿನದಿಂದಲೇ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣದೊಂದಿಗೆ ಆರಂಭಿಸಿ, ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ನಿವೇಶನಗಳ ಹಂಚಿಕೆ ಆರೋಪ ಸೇರಿದಂತೆ ಇಡೀ ಪ್ರಕರಣದ ಸಿಬಿಐ ತನಿಖೆ ಕೋರಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು, ಗ್ಯಾರಂಟಿ ಯೋಜನೆಗಳಿಗೆ ಎಸ್ಇಪಿ ಟಿಎಸ್ಪಿ ಹಣ ಬಳಕೆ ವಿರುದ್ಧ ಹೋರಾಟ ನಡೆಸಬೇಕು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ಹೋರಾಟ ನಡೆಸಬೇಕು ಹಾಗು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎನ್ನುವುದರ ವಿರುದ್ಧವೂ ಗಟ್ಟಿಯಾದ ದನಿಯಲ್ಲಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು ಎನ್ನುವ ನಿರ್ಧಾರವನ್ನು ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.