ಧಾರವಾಡ: ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ ತರಬೇತಿ ಕೇಂದ್ರ ಸ್ಥಾಪನೆ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಚರ್ಚೆ ನಡೆಸಿದ್ದಾರೆ. ಇದರಿಂದ ಕಾಲೇಜು ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಕ್ಕೆ ಸೋಮವಾರ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಸದಸ್ಯರ ಭೇಟಿ– ಚರ್ಚೆ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಈ ಕಾಲೇಜಿನಲ್ಲಿ 4500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಎಡಿಬಿ ತಂಡವು ಹಲವು ಸೌಲಭ್ಯಗಳನ್ನು ಒದಗಿಸಿದರೆ ಗುಣಮಟ್ಟದ ಶಿಕ್ಷಣ ನೀಡಲು ಅನುಕೂಲವಾಗಲಿದೆ ಎಂದರು.
ಪ್ರಾಚಾರ್ಯೆ ಪ್ರೊ.ನಳಿನಿ ಬೆಂಗೇರಿ ಮಾತನಾಡಿ, ಎಡಿಬಿ ತಂಡವು ಕಾಲೇಜಿನ ಉನ್ನತೀಕರಣ, ಅವುಗಳಿಗೆ ಮೂಲಸೌಕರ್ಯ ಒದಗಿಸುವುದು, ನಿರ್ವಹಣೆ, ವಿದ್ಯಾರ್ಥಿಗಳಿಗೆ ಕೌಶಲಕ್ಕೆ ಸಂಬಂಧಿಸಿದ ಶಿಕ್ಷಣ ನೀಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಕಾಲೇಜಿಗೆ ಅಗತ್ಯವಿರುವ ಮೂಲಸೌಕರ್ಯದ ಬಗ್ಗೆ ತಂಡಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
ಎಡಿಬಿ ತಂಡದ ಸದಸ್ಯರು ಕಾಲೇಜಿನ ವಿವಿಧ ಕೊಠಡಿಗಳಿಗೆ ತೆರಳಿ ಮೂಲಸೌಕರ್ಯ ಪರಿಶೀಲಿಸಿದರು. ಹಾಲಿ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.
ಎಡಿಬಿ ಸದಸ್ಯರಾದ ನಹ್ಯೂಮ್ ಕಿಮ್, ಯಶಪಾಲ್ ಮಲ್ಲಿಕ್, ಲೇಹ್ ಮ್ಯಾಕ್ ಮ್ಯಾನಸ್, ಸ್ಯಾಮುವೆಲ್ ಕೆ ಅಂಗ್, ಶೌನ್ ಎಂ ವೆಲ್ ಬೌರ್ನ್ ವುಡ್, ಪ್ರೊ. ಶೋಭಾ ಪ್ರೊ.ಗುರುನಾಥ ಬಡಿಗೇರ, ಪ್ರಾಧ್ಯಾಪಕರು, ಉಪನ್ಯಾಸಕರು ಇದ್ದರು.