ಬೆಳಗಾವಿ, ಜೂನ್ 18: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಕೃಷ್ಣಾ, ವೇದಗಂಗಾ, ದೂದಗಂಗಾ ನದಿಯ ಒಳ ಹರಿವು ಹೆಚ್ಚಾಗಿದೆ. ಈ ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಆರು ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಈ ಆರು ಸೇತುವೆಗಳು ಹನ್ನೆರಡು ಗ್ರಾಮಗಳಿಗೆ ನೇರ ಸಂಪರ್ಕ ಕಲ್ಪಿಸುತ್ತಿವೆ.
ಬಾರವಾಡ-ಕುನ್ನೂರು, ಬೋಜ-ಕಾರದಗಾ, ಭೋಜವಾಡಿ -ಕುನ್ನೂರು ಮತ್ತು ಯಡೂರು- ಕಲ್ಲೋಳ, ಭಾವನಸೌಂದತ್ತಿ- ಮಾಂಜರಿ ಸೇತುವೆಗಳ ಸಂಪರ್ಕ ಕಡಿತ ಆಗಿದೆ. ಇದರಿಂದಾಗಿ 12 ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಈ ಗ್ರಾಮಗಳ ಜನರು ಪರ್ಯಾಯ ಮಾರ್ಗವಾಗಿ ಸಂಚರಿಸಬೇಕಾಗಿದೆ.
ಅತ್ತ ಕೃಷ್ಣಾ ನದಿಯ ಒಳ ಹರಿವು ಕೂಡ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 55 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ 6 ಸೇತುವೆಗಳು ಜಲಾವೃತಗೊಂಡಿವೆ. ಅತ್ತ ಘಟಪ್ರಭಾ ನದಿಯ ಒಳ ಹರಿವು ಹೆಚ್ಚಾಗಿದೆ. ಮತ್ತೊಂದೆಡೆ, ಖಾನಾಪುರದ ಕಾಡಂಚಿನಲ್ಲಿ ಭಾರಿ ಮಳೆ ಆಗುತ್ತಿದ್ದುದ್ದರಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.