ಬಳ್ಳಾರಿ: ವಿಧಾನಪರಿಷತ್ ಮಾಜಿ ಸಭಾಪತಿ, ಹಿರಿಯ ನ್ಯಾಯವಾದಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆಗಿದ್ದ ಎನ್. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ ಇಲ್ಲಿನ ಗಾಂಧಿನಗರದಲ್ಲಿ ಕೊನೆಯುಸಿರೆಳೆದರು.
ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ನಾಳೆ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಕೀಲರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಪ್ರತಿಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.