ಬೆಂಗಳೂರು: ನಕಲಿ, ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟದ ಐದು ಎಫ್ಐಆರ್ಗಳು ದಾಖಲಾಗಿದ್ದರೂ ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ: ಕೇಂದ್ರ
ಈ ವರ್ಷ ಕರ್ನಾಟಕದಲ್ಲಿ ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಐದು ಎಫ್ಐಆರ್ಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ, ಆದರೆ ಪ್ರಸ್ತುತ ಖಾರಿಫ್ ಋತುವಿಗೆ ರಾಜ್ಯದಲ್ಲಿ ರಸಗೊಬ್ಬರಗಳ ಸಾಕಷ್ಟು ಲಭ್ಯತೆ ಇದೆ ಎಂದು ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಚಿತ್ರದುರ್ಗ ಸಂಸದ ಗೋವಿಂದ್ ಎಂ. ಕಾರಜೋಳ ಅವರ ಪ್ರತ್ಯೇಕ ಪ್ರಶ್ನೆಗೆ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉತ್ತರಿಸಿದ್ದಾರೆ, ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟ ಸಂಬಂಧ ಐದು ಎಫ್ಐಆರ್ಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಿದೆ ಎಂದು ಮಾಹಿತಿ ನೀಡಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ಗಳು ದಾಖಲಾಗಿದ್ದರೆ, ಹಾವೇರಿ ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.
ಗ್ರಾಮೀಣ ಮಾರುಕಟ್ಟೆಗಳಲ್ಲಿ ನಕಲಿ ರಸಗೊಬ್ಬರಗಳ ಚಲಾವಣೆಯನ್ನು ಪತ್ತೆಹಚ್ಚಲು ಮತ್ತು ತಡೆಯಲು ಯಾವುದೇ ಕಾರ್ಯವಿಧಾನಗಳು ಪ್ರಸ್ತುತ ಜಾರಿಯಲ್ಲಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಕಲಿ ಮತ್ತು ಕಳಪೆ ರಸಗೊಬ್ಬರ ಮಾರಾಟವನ್ನು ತಡೆಯಲು 1985ರ ರಸಗೊಬ್ಬರ ನಿಯಂತ್ರಣ ಆದೇಶದ ಅನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹ ಗೊಬ್ಬರ ಮಾರಾಟವು ಅಗತ್ಯ ವಸ್ತುಗಳ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.