ಬೆಂಗಳೂರು, ಸೆಪ್ಟೆಂಬರ್ 20: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜೋಡೆತ್ತುಗಳು ಎಂದೇ ಗುರುತಿಸಿಕೊಂಡವರು ಹೆಚ್ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್. ನಂತರ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಿದ್ದರಿಂದ ಕುಮಾರಸ್ವಾಮಿ ಕೇಂದ್ರ ಸಚಿವರಾದರು. ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾದರು. ಅಲ್ಲಿಂದ ಉಭಯ ನಾಯಕರ ನಡುವೆ ತೀವ್ರ ರಾಜಕೀಯ ವಾಕ್ಸಮರ, ಬದ್ಧ ರಾಜಕೀಯ ವೈರತ್ವ ಏರ್ಪಟ್ಟಿತ್ತು. ಇದೀಗ ಉಭಯ ನಾಯಕರು ರಾಜಕೀಯ ವೈರತ್ವ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಗೆ ಹಾಜರಾದ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್, ನಿರ್ಮಲಾನಂದ ಸ್ವಾಮೀಜಿ ಜತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.