ಬಳ್ಳಾರಿ ಜಿಲ್ಲೆಯಲ್ಲಿ ನ.13 ರಿಂದ 19 ರ ವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

Ravi Talawar
ಬಳ್ಳಾರಿ ಜಿಲ್ಲೆಯಲ್ಲಿ ನ.13 ರಿಂದ 19 ರ ವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ
WhatsApp Group Join Now
Telegram Group Join Now


ಯಾವುದೇ ಲೋಪವಾಗದಂತೆ ಯಶಸ್ವಿಗೊಳಿಸೋಣ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಬಳ್ಳಾರಿ,ನ.05 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ನವೆಂಬರ್ 13 ರಿಂದ 19 ರವರೆಗೆ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಜಿಲ್ಲೆಗೆ ಹೆಸರು ಬರುವಂತೆ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ಮಂಗಳವಾರ, ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಗಾಗಿ ಬಳ್ಳಾರಿ ಜಿಲ್ಲೆಯನ್ನು ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಾಗಾಗಿ ಜಿಲ್ಲೆಯ ಎಲ್ಲಾ ರಾಜ್ಯ ಮತ್ತು ಕೇಂದ್ರ ಇಲಾಖೆಗಳ ಅಧಿಕಾರಿಗಳ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಶಿಸ್ತುಬದ್ಧವಾಗಿ ಆಯೋಜನೆ ಮಾಡುವ ಮೂಲಕ ಯಾವುದೇ ರೀತಿಯ ಲೋಪವಾಗದಂತೆ ಯಶಸ್ವಿಗೊಳಿಸೋಣ ಎಂದು ತಿಳಿಸಿದರು.
ನ.13 ರಿಂದ ಆರಂಭವಾಗಿ ನ.19 ರವರೆಗೆ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಶಾರಿರೀಕ ದೇಹದಾರ್ಢ್ಯ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗುವವರೆಗೆ ಸೇನಾ ಅಧಿಕಾರಿಗಳಿಗೆ ಜಿಲ್ಲೆಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

ಬೆಂಗಳೂರು ಪ್ರಧಾನ ಕಚೇರಿಯ ಆರ್‌ಓ ಮತ್ತು ಸೇನಾ ನೇಮಕಾತಿ ಅಧಿಕಾರಿಯಾದ ಮೇಜರ್ ಕಪಿಲ್.ಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 7 ದಿನಗಳ ಕಾಲ ನಡೆಯುವ ರ‍್ಯಾಲಿಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಂದ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ರ‍್ಯಾಲಿ ಪ್ರಕ್ರಿಯೆಯು ಆಯಾ ದಿನಗಳ ಬೆಳಿಗ್ಗೆ 05 ರಿಂದ ಪ್ರಾರಂಭಗೊAಡು ಮಧ್ಯಾಹ್ನ 12 ರ ವರೆಗೆ ನಡೆಯಲಿದ್ದು, ಪ್ರತಿ ದಿನ 800 ರಿಂದ 1000 ವರೆಗೆ ಅಭ್ಯರ್ಥಿಗಳು ಭಾಗವಹಿಸುವ ಅವಕಾಶವಿದೆ. ಅದರಲ್ಲಿ ಶೇ.40 ರಷ್ಟು ಅಭ್ಯರ್ಥಿಗಳು ಅರ್ಹರಾಗುತ್ತಾರೆ. ಎರಡು ದಿನಗಳ ಕಾಲ ತಂಗಲಿದ್ದು, ಅವರಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯ ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ರ‍್ಯಾಲಿಯಲ್ಲಿ ಭಾಗವಹಿಸಲು ಆಗಮಿಸುವ ಅಭ್ಯರ್ಥಿಗಳಿಗೆ ನಗರದ ಸರ್ಕಾರಿ ಅತಿಥಿ ಗೃಹ, ಪೊಲೀಸ್ ಜಿಮ್‌ಖಾನ, ವಾಲ್ಮೀಕಿ ಭವನ, ಡಾ.ಬಾಬು ಜಗನ್ ಜೀವನರಾಮ್ ಭವನ ಸೇರಿದಂತೆ ಮೂಲ ಸೌಕರ್ಯವುಳ್ಳ ಸಮುದಾಯ ಭವನಗಳನ್ನು ಗುರುತಿಸಿ ತಂಗಲು ವ್ಯವಸ್ಥೆ ಮಾಡಬೇಕು. ಅದೇರೀತಿಯಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಶೌಚಾಲಯ, ಸ್ವಚ್ಛತೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ರ‍್ಯಾಲಿಯಲ್ಲಿ ಭಾಗವಹಿಸಲು ಬಳ್ಳಾರಿಗೆ ಆಗಮಿಸುವ ಅಭ್ಯರ್ಥಿಗಳನ್ನು ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಿಂದ ಬಸ್ ವ್ಯವಸ್ಥೆ ಕೈಗೊಳ್ಳುವಂತೆ ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮತ್ತು ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಲು ಬಸ್ ಮತ್ತು ರೈಲ್ವೇ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೇ, ಸಾಧ್ಯವಾದರೆ ಬ್ಯಾನರ್ ಮತ್ತು ಕ್ರೀಡಾಂಗಣದ ಕ್ಯೂಆರ್ ಕೋಡ್ ಒಳಗೊಂಡ ಸ್ಥಳದ ಮಾಹಿತಿ ಭಿತ್ತಿ ಪತ್ರ ಸಿದ್ಧಪಡಿಸುವಂತೆ ತಿಳಿಸಿದರು.

ವಿವಿಧ ದಿನಗಳಂದು ನಡೆಯುವ ಸೇನಾ ನೇಮಕಾತಿಯು ಬೆಳಿಗ್ಗೆಯಿಂದಲೇ ಆರಂಭಗೊಳ್ಳುವುದರಿAದ ಅಭ್ಯರ್ಥಿಗಳನ್ನು ನಿಗದಿತ ಸ್ಥಳಕ್ಕೆ ಕರೆದುಕೊಂಡು ಹೋಗಿಬರಲು ಸೂಕ್ತ ಯೋಜನಾ ಕಾರ್ಯ ರೂಪಿಸಬೇಕು. ಟ್ರಾಫಿಕ್ ಸಮಸ್ಯೆಯಾಗುವಂತಿಲ್ಲ. ಈ ಕುರಿತು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಮತ್ತು ಲೋಕೋಪಯೋಗಿ ಅಧಿಕಾರಿಗಳು ಸಮನ್ವಯತೆ ಹೊಂದಬೇಕು ಎಂದರು.

ಜಿಲ್ಲಾ ಕ್ರೀಡಾಂಗಣಲ್ಲಿ ಅಭ್ಯರ್ಥಿಗಳ ಒಳಪ್ರವೇಶಕ್ಕೆ ಪ್ರವೇಶ ಪತ್ರ ಮಾನ್ಯತೆಯಾಗಿದ್ದು, ಪೊಲೀಸ್ ಅಧಿಕಾರಿಗಳು ದಾಖಲೆ ಪರಿಶೀಲಿಸಿ ಪ್ರವೇಶ ಕಲ್ಪಿಸಬೇಕು. ಯಾವುದೇ ರೀತಿಯ ತೊಡಕು ಉಂಟಾಗುವAತಿಲ್ಲ. ಅಗತ್ಯಕ್ಕಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕ್ರೀಡಾಂಗಣದ ವ್ಯಾಪ್ತಿಯಲ್ಲಿ ಸೂಕ್ತ ಬಂದೋ-ಬಸ್ತ್ ಕಲ್ಪಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.

ಅಭ್ಯರ್ಥಿಗಳಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದ ಬಳಿ ಅಗತ್ಯ ಅಂಬುಲೆನ್ಸ್, ಅಗ್ನಿಶಾಮಕ  ವಾಹನ, ಅಭ್ಯರ್ಥಿಗಳ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ನುರಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ವೇದಿಕೆ, ಆಸನ ವ್ಯವಸ್ಥೆ, ನಿರಂತರ ವಿದ್ಯುತ್ ವ್ಯವಸ್ಥೆ, ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಜನರೇಟರ್ ವ್ಯವಸ್ಥೆ, ತ್ಯಾಜ್ಯದ ತೊಟ್ಟಿಗಳ ವ್ಯವಸ್ಥೆ, ಬಿಎಸ್‌ಎನ್‌ಎಲ್ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಜೊತೆಗೆ ವೈಫೈ ಮತ್ತು ಟೆಲಿಫೋನ್, ಎಲ್‌ಎಎನ್ ಸಂಪರ್ಕ, ಫೈಬರ್ ಕೇಬಲ್ ಜೊತೆಗೆ ಟೆಕ್ನಿಕಲ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೇನಾ ನೇಮಕಾತಿ ರ್ಯಾಲಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಸೇನಾ ನೇಮಕಾತಿಯ ಅಧಿಕಾರಿ ಕರ್ನಲ್ ವಿವೇಕ್ ಜಮಿಂದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article