ರಾಮನಗರ, ನವೆಂಬರ್ 17: ಯಾವುದೇ ಸರ್ಕಾರಿ ಜಾಗದಲ್ಲಿ ಏನನ್ನಾದರೂ ನಿರ್ಮಿಸಬೇಕಾದಲ್ಲಿ ಸಂಬಂಧಪಟ್ಟ ಆಡಳಿತದ ಅನುಮತಿ ಕಡ್ಡಾಯವಾಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲ ಕ್ರಾಸ್ ಬಳಿ ಜಿಲ್ಲಾಡಳಿತದ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗದಲ್ಲಿ ಕೆಲ ದಿನಗಳ ಕೆಳಗೆ ಏಕಾಏಕಿ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗಿದ್ದು, ದಲಿತ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ.
ಇದೀಗ ನಿರ್ಮಾಣಗೊಂಡಿರುವ ಕೆಂಪೇಗೌಡರ ಪ್ರತಿಮೆ ಸ್ಥಳದಲ್ಲಿ ಈ ಹಿಂದೆ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ಸ್ಥಳೀಯ ಪುರಸಭೆ ಹಾಗೂ ಶಾಸಕ ಬಾಲಕೃಷ್ಣ ಅವರಿಗೆ ದಲಿತ ಸಂಘಟನೆಗಳು ಮನವಿ ಮಾಡಿದ್ದರು. ಆದರೆ ಅದೇ ಜಾಗಲ್ಲಿ ಈಗ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಗಿದೆ. ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಯಾವುದೇ ಆಡಳಿತದಿಂದ ಅನುಮತಿ ಪಡೆಯದೆಯೇ ಕೆಂಪೇಗೌಡರ ಪ್ರತಿಮೆ ನಿರ್ಮಿಸಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪ ಮಾಡುತ್ತಿದ್ದಾರೆ.


