ಇಂಡಿ: ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಶಿಕ್ಷಣದ ಪ್ರವರ್ತಕರಾಗಿ, ದಲಿತ, ಆದಿವಾಸಿ, ಮುಸ್ಲಿಂ ಸಮುದಾಯದ ಮಹಿಳೆಯರು ಮತ್ತು ಅವರ ಮಕ್ಕಳ ಶಿಕ್ಷಣದ ಹಕ್ಕಿಗಾಗಿ ದೃಢವಾಗಿ ನಿಂತು, ತಮ್ಮ ಜೀವಮಾನವಿಡಿ ಸಮಾನತೆಗಾಗಿ ಹೋರಾಡಿದ ಧೀಮಂತ ಮಹಿಳೆ ಫಾತಿಮಾ ಶೇಖ್ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶುಕ್ರವಾರದಂದು ತಾಲೂಕಿನ ಯುಬಿಎಸ್ ಶಾಲೆಯಲ್ಲಿ ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಖ್ ಅವರ ಜನ್ಮದಿನದ ನಿಮಿತ್ತ ‘ಮಹಿಳೆಯರಿಗೆ ಶಿಕ್ಷಣದ ಮಹತ್ವ’ ಕುರಿತು ಅವರು ಮಾತನಾಡಿದರು.
ಫಾತಿಮಾ ಶೇಖ್ ದೇಶದ ಅನರ್ಘ್ಯ ರತ್ನ. ದಲಿತರು, ಮುಸ್ಲಿಮರು ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ನೀಡಲು ಮನೆ-ಮನೆಗೆ ತೆರಳಿದರು. ಜಾತಿ-ಲಿಂಗ ಅಸಮಾನತೆ ವಿರುದ್ಧ ಹೋರಾಡಿದ ಅವರು ಭಾರತದಲ್ಲಿ ಮಹಿಳಾ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಹೇಳಿದರು.
ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರ ಶಿಕ್ಷಣವು ಕೇವಲ ವೈಯಕ್ತಿಕ ಬೆಳವಣಿಗೆಯಲ್ಲ, ಬದಲಾಗಿ ಕುಟುಂಬ, ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಅಡಿಪಾಯವಾಗಿದೆ ಎಂದರು.
ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.


