ಕುರುಗೋಡು: ವಿವಿಧೆಡೆ ದಾಳಿ-ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ಫೆ.04- ಕಾರ್ಮಿಕ ಇಲಾಖೆ ಹಾಗೂ ಇತರೆ ಸಹಭಾಗೀದಾರರ ಇಲಾಖೆಯ ಸಹಯೋಗದಲ್ಲಿ ಕುರುಗೋಡು ಪಟ್ಟಣದ ವಿವಿಧೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಗ್ರೇಡ್-2 ತಹಶೀಲ್ದಾರ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಯಿತು.
ಕುರುಗೋಡು ಪಟ್ಟಣದ ಗೆಣಿಕೆಹಾಳ್ ರಸ್ತೆ, ತೇರು ಬೀದಿ, ಹಳೇ ಎಸ್.ಬಿ.ಎಂ. ರಸ್ತೆ ಹತ್ತಿರದ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮುಖಾಂತರ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಗಮನಿಸಲಾಯಿತು. ತಕ್ಷಣ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ 03 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ವಶಕ್ಕೆ ಪಡೆದುಕೊಂಡು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಂಡು ಅವರನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣ ಇಲಾಖೆಗೆ ಒಪ್ಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕುರುಗೋಡು ತಾಪಂ ಕಚೇರಿಯ ಶಿವರಣ ರೆಡ್ಡಿ, ಪುರಸಭೆಯ ಆರೋಗ್ಯಾಧಿಕಾರಿ ಆದಿಕೇಶವ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಡೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಮಂಜುಳ, ಆರೋಗ್ಯ ಇಲಾಖೆಯ ಗೋವಿಂದಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರ ಪ್ರಶಾಂತ್ ಕುಮಾರ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್ ಮತ್ತು ರೀಚ್ ಸಂಸ್ಥೆಯ ಸಂಯೋಜಿಕಿ ಬಸಮ್ಮ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕುರುಗೋಡು: ವಿವಿಧೆಡೆ ದಾಳಿ-ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ


