ಮಾರ್ಚ್ 27 ರಿಂದ ಏಪ್ರಿಲ್ 4ರವರೆಗೆ ವಿವಿಧ ಜಾತ್ರೆ ರಥೋತ್ಸವ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ

MK HasiruKranti
ಮಾರ್ಚ್ 27 ರಿಂದ ಏಪ್ರಿಲ್ 4ರವರೆಗೆ ವಿವಿಧ ಜಾತ್ರೆ ರಥೋತ್ಸವ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ
WhatsApp Group Join Now
Telegram Group Join Now

ವಿಜಯನಗರ (ಹೊಸಪೇಟೆ)  ಮಾರ್ಚ್.17:
ಮುಂಬರುವ ಮಾರ್ಚ್ 27 ರಿಂದ ಏಪ್ರಿಲ್ 4 ರವರೆಗೆ ವಿವಿಧ ದೇವಸ್ಥಾನಗಳ ಜಾತ್ರಾ ಮಹೋತ್ಸವ ಜರುಗಲಿದ್ದು, ಅತ್ಯಂತ ವಿಜೃಂಭಣೆ ಮತ್ತು ಭಕ್ತಿಪೂರ್ವಕ ಹಾಗೂ ಶಿಸ್ತುಬದ್ಧವಾಗಿ ರಥೋತ್ಸವ ಜರುಗಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ವಿವಿಧ ದೇವಸ್ಥಾನಗಳ ವಾರ್ಷಿಕ ಜಾತ್ರಾ ಮಹೋತ್ಸವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ಇದೇ ಮಾರ್ಚ್ 27 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಷಿಕ ರಥೋತ್ಸವ, ಮಾರ್ಚ್ 27 ರಿಂದ ಏಪ್ರಿಲ್ 4 ವರೆಗೆ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಹಾಗೂ ಮಾರ್ಚ್ 31ರವರೆಗೆ ಜಂಬುನಾಥ ಗ್ರಾಮದ ಶ್ರೀ ಜಂಬುನಾಥೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ನಡೆಯಲಿದೆ.
ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವುದರಿಂದ, ಯಾವುದೇ ಸಣ್ಣ ಲೋಪ-ದೋಷಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ, ಮಾರ್ಚ್ ತಿಂಗಳ ಬಿಸಿಲನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಬೇಕು. ವೈದ್ಯಕೀಯ ಇಲಾಖೆಯಿಂದ ತುರ್ತು ವೈದ್ಯಕೀಯ ಸೇವೆಗಳಲ್ಲಿ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಅಂಬುಲೆನ್ಸ್ ಸಹಿತ ಸಿಬ್ಬಂದಿ ನಿಯೋಜಿಸಬೇಕು.
ಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆ, ರಾತ್ರಿ ವೇಳೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೀದಿ ದೀಪ ಅಳವಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಎಲ್ಲಾ ರೀತಿಯ ಮೂಲಸೌಕರ್ಯಗಳ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.
ದರ್ಶನಕ್ಕೆ ನೂಕು ನುಗ್ಗಲು ಉಂಟಾಗದಂತೆ ತಾತ್ಕಾಲಿಕ ಬ್ಯಾರಿಕೇಡ್ ಅಳವಡಿಸಿ ಸರದಿ ಮೂಲಕ ಭಕ್ತರ ದಟ್ಟಣೆಯನ್ನು ಸುಗಮವಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಈ ಬಾರಿ ಭದ್ರತೆಯನ್ನು ಹೆಚ್ಚಿಸಲಾಗುವುದು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು, ಜೊತೆಗೆ ತಾತ್ಕಾಲಿಕ ಪೊಲೀಸ್ ನಿಯಂತ್ರಣ ಕೊಠಡಿ ಸ್ಥಾಪಿಸಬೇಕು. ಜಾತ್ರೆ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ವತಿಯಿಂದ ಸಿಬ್ಬಂದಿ ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಜಾತ್ರಾ ರಥೋತ್ಸವ ರಥ ಸಂಚರಿಸುವ ಬೀದಿಗಳಲ್ಲಿನ ಗೂಡಂಗಡಿಗಳ ತೆರವುಗೊಳಿಸಿ ರಥ ಮುಕ್ತ ಸಂಚಾರಕ್ಕೆ ಕ್ರಮವಹಿಸಬೇಕು ಎಂದರು.
ಜಂಬುನಾಥೇಶ್ವರ ದೇವಸ್ಥಾನ ಸಂಪರ್ಕ ಕಲ್ಪಿಸಲು ರಸ್ತೆ ಕಾಮಗಾರಿ ವಿವಿಧ ಕಾರಣಗಳಿಂದ ಅರ್ಧಕ್ಕೆ ಮೊಟಕಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಭಕ್ತಾಧಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಾತ್ರಾ ಮಹೋತ್ಸವ ವೇಳೆ ವಿದ್ಯುತ್ ವ್ಯತ್ಯಯ ಆಗದಂತೆ ಜೆಸ್ಕಾಂ ಅಧಿಕಾರಿಗಳು ಕ್ರಮವಹಿಸಬೇಕು. ಜಾತ್ರಾ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಸನ್ನದ್ದರಾಗಿರಬೇಕು. ಕಲ್ಯಾಣ ಕರ್ನಾಟಕ ಸಾರಿಗೆ ವತಿಯಿಂದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಜಾತ್ರೆಯ ಸಂದರ್ಭದಲ್ಲಿ ಭಕ್ತಾಧಿಗಳು, ದೇವಸ್ಥಾನದ ವತಿಯಿಂದ ಅನ್ನ ದಾಸೋಹ ಕಾರ್ಯ ನಡೆಯಲಿದೆ. ಈ ವೇಳೆ ಭಕ್ತರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಉಪಹಾರ ಪರಿಶೀಲಿಸಿ ನಂತರ ಭಕ್ತರಿಗೆ ವಿತರಣೆ ಮಾಡಬೇಕು.
ಹಂಪಿ ವಿರೂಪಾಕ್ಷ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರಿಗೆ ಹೊಳೆಯಲ್ಲಿ ಸ್ನಾನ ಮಾಡಿದ ನಂತರ ಅವರಿಗೆ ಬಟ್ಟೆ ಬದಲಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಶೆಡ್ (ಟೆಂಟ್) ನಿರ್ಮಿಸಬೇಕು. ಭಕ್ತಾಧಿಗಳು ಸ್ನಾನ ಮಾಡುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪರಿಣಿತ ಈಜುಗಾರರನ್ನು ಲೈಫ್ ಜಾಕೆಟ್ ನಂತಹ ಅಗತ್ಯ ಸೌಕರ್ಯಗಳೊಂದಿಗೆ ನಿಯೋಜಿಸಬೇಕು. ಹವಾಮಾ ವತಿಯಿಂದ ಸಾರ್ವಜನಿಕರು, ಭಕ್ತರು ತ್ಯಜಿಸಿದ ಬಟ್ಟೆಗಳನ್ನು ಒಂದೆಡೆ ಹಾಕಲು ಪವಿತ್ರ ಕುಂಡ ಸ್ಥಾಪಿಸಲಾಗಿದ್ದು, ಭಕ್ತರು ಸಾರ್ವಜನಿಕರು ತಮ್ಮ ಬಟ್ಟೆಗಳನ್ನು ಎಲ್ಲಂದರಲ್ಲಿ ಎಸೆಯದೆ ಪವಿತ್ರ ಕುಂಡದಲ್ಲಿ ಹಾಕಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತೆ ಹೆಚ್. ಸವಿತಾ ಸೇರಿದಂತೆ ಮತ್ತಿತರರು ಇದ್ದರು.
—-

WhatsApp Group Join Now
Telegram Group Join Now
Share This Article