ರಾಮದುರ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತಾ ಇಲಾಖೆಯ ವತಿಯಿಂದ ಕಟಕೋಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲ ಮಹೋತ್ಸವ ಹಾಗೂ ಫೀಲ್ಡ್ ಟೆಸ್ಟ್ ಕಿಟ್ (ಎಫ್ಟಿಕೆ) ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಮುಖ್ಯ ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ), ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಜಿಲ್ಲಾ ಯೋಜನಾ ವ್ಯವಸ್ಥಾಪಕರು (ಡಿಪಿಎಂ), ಪಂಚಾಯತ್ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು.
ಕಾರ್ಯಕ್ರಮದ ಅಂಗವಾಗಿ ಜಲ ಸಂರಕ್ಷಣೆ, ಶುದ್ಧ ಕುಡಿಯುವ ನೀರಿನ ಅಗತ್ಯತೆ ಹಾಗೂ ನೀರಿನ ಗುಣಮಟ್ಟ ಪರೀಕ್ಷೆಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಎಫ್ಟಿಕೆ ತರಬೇತಿ ಮೂಲಕ ನೀರಿನ ಮಾದರಿಗಳನ್ನು ಪರಿಶೀಲಿಸುವ ವಿಧಾನಗಳನ್ನು ನೇರವಾಗಿ ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು.
ನಂತರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಮರ್ ನಾಯಕ್. ಎಸ್ ಅವರು ಮಾತನಾಡಿ, ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಗುರಿಯಾಗಿದ್ದು, ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು, ಇಂಜಿನಿಯರಗಳು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಜಲ ಸಂರಕ್ಷಣೆ ಕುರಿತು ಪ್ರತಿಜ್ಞೆ ಸ್ವೀಕರಿಸಿ, ತಮ್ಮ ಮನೆ ಮತ್ತು ಸಮುದಾಯದಲ್ಲಿ ನೀರಿನ ಸಂರಕ್ಷಣೆಗಾಗಿ ಶ್ರಮಿಸುವುದಾಗಿ ತಿಳಿಸಿದರು.


