ಬಳ್ಳಾರಿ, ಮಾ.27: ಬಳ್ಳಾರಿ ನಗರದಲ್ಲಿ ಹೆಚ್ಚುತ್ತಿರುವ ಕಳ್ಳತನ, ದರೋಡೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಳ್ಳಾರಿ ನಗರ ಜನಜಾಗೃತಿ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಹುಂಡೇಕರ ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸದಸ್ಯರು ನಗರದಲ್ಲಿ ಸಾರ್ವಜನಿಕರ ಭದ್ರತೆ ಕುರಿತು ಆತಂಕ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಚೈನ್ ಸ್ನಾಚಿಂಗ್, ದ್ವಿಚಕ್ರ ವಾಹನ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಾಗರಿಕರು ಭಯಭೀತ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಗರದ ಎಲ್ಲಾ ಪ್ರಮುಖ ಸರ್ಕಲ್ಗಳಲ್ಲಿ ಹಾಗೂ ಸ್ಲಂ ಪ್ರದೇಶಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಜೊತೆಗೆ ರಾತ್ರಿ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಕಡ್ಡಾಯ ನಗರ ರೌಂಡ್ಸ್ ನಡೆಸಿ, ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ವಿಶೇಷ ಪೊಲೀಸ್ ಪೇದೆಗಳನ್ನು ನಿಯೋಜಿಸಿ ಸಾರ್ವಜನಿಕರ ಭದ್ರತೆ ಹೆಚ್ಚಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇದೇ ವೇಳೆ ಹೊಸದಾಗಿ ನಿರ್ಮಾಣವಾಗುತ್ತಿರುವ ಲೇಔಟ್ ಪ್ರದೇಶಗಳಲ್ಲಿ ಯುವಕರು ದುಶ್ಚಟಗಳಿಗೆ ಒಳಗಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಂಘದ ಪದಾಧಿಕಾರಿಗಳು, ಡ್ರಗ್ಸ್ ಹಾಗೂ ಮದ್ಯಪಾನದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ವಾಮಿ ನಾಯ್ಕ್, ಭಾಷಾ,ಗಡಿಲಿಂಗ, ನಾಗರಾಜ್,ಗಂಗಾಧರ,ವೀರೇಶ್, ಪವನ್,ರಾಮರೆಡ್ಡಿ,ಚಂದ್ರ, ಶಂಕರ್,ಮಾಸ್ತನ್,ಪ್ರವೀಣ್, ಶ್ರೀನಿವಾಸ್,ದೇವರಾಜ್, ಬಸವರಾಜ್,ರಾಮಲಿ ನಾಯ್ಕ್, ಯಲ್ಲಪ್ಪ,ಹುಸೇನ್,ಅನಿಲ್, ಅನ್ವರ್,ದುರುಗಪ್ಪ,ನಾಗೇಂದ್ರ, ದೇವೇಂದ್ರ,ಸೀನ,ಮಹೇಶ್, ಸೇರಿದಂತೆ ಜನಜಾಗೃತಿಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


