2,591 ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡಲಾಗಿದೆ : ಡಾ.ಹನುಮಂತಪ್ಪ

Pratibha Boi
2,591 ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡಲಾಗಿದೆ : ಡಾ.ಹನುಮಂತಪ್ಪ
WhatsApp Group Join Now
Telegram Group Join Now
ಬಳ್ಳಾರಿ,ಏ.08:ಜಿಲ್ಲೆಯಲ್ಲಿ 14 ವರ್ಷದ ಹೆಣ್ಣು ಮಕ್ಕಳಲ್ಲಿ ಈವರೆಗೆ 2,591 ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ 16,49,492 ಒಟ್ಟು ಜನಸಂಖ್ಯೆಯಲ್ಲಿ ಶೇ.01 ರಷ್ಟು 14 ವರ್ಷದ ಹೆಣ್ಣು ಮಕ್ಕಳು ಅಂದರೆ 16,495 ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ ಒಟ್ಟು 2,591 ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಯಾರಿಗೂ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರಿಲ್ಲ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ತಪ್ಪು ಮಾಹಿತಿ ಪ್ರಸಾರವಾಗುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತು ಪಾಲಕರು ಕಿವಿಕೊಡದೇ ತಮ್ಮ 14 ವರ್ಷದ ಹೆಣ್ಣು ಮಕ್ಕಳ ಉತ್ತಮ ಆರೋಗ್ಯಕ್ಕೆ ಹೆಚ್.ಪಿ.ವಿ ಲಸಿಕೆಯನ್ನು ತಪ್ಪದೇ ಹಾಕಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಲಸಿಕಾ ಕಾರ್ಯಕ್ರಮ ಈಗಾಗಲೇ ಮಾರ್ಚ್ 11 ರಿಂದ ಆರಂಭವಾಗಿದ್ದು, 90 ದಿನಗಳವರೆಗೆ ಮುಂದುವರೆಯಲಿದೆ. 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಈ ಹೆಚ್‌ಪಿವಿ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಲಸಿಕೆ ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ನ್ನು ಶೇ.99 ರಷ್ಟು ತಡೆಗಟ್ಟಬಹುದಾಗಿದೆ. ಹಾಗಾಗಿ ಲಸಿಕೆ ಪಡೆಯಲು ಬರುವ ಫಲಾನುಭವಿಗಳು ಸೂಕ್ತ ಗುರುತಿನ ಚೀಟಿ (ಜನನ ಪ್ರಮಾಣ ಪತ್ರ) ಯೊಂದಿಗೆ ಕಡ್ಡಾಯವಾಗಿ ಪೋಷಕರನ್ನು ಜೊತೆಯಲ್ಲಿ ಕರೆದುಕೊಂಡು ಬರಬೇಕು. ಕ್ಯಾನ್ಸರ್ ಮುಕ್ತ ನಾಳೆಗಾಗಿ ಇಂದೆ ಇರಲಿ ಲಸಿಕೆಯ ಸುರಕ್ಷೆ ಎಂದು ತಿಳಿಸಿದ್ದಾರೆ.
‘ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ 14 ವರ್ಷದ ಹೆಣ್ಣು ಮಕ್ಕಳಿಗೆ ಜಿಲ್ಲೆಯಲ್ಲಿ ಉಚಿತ ಹೆಚ್.ಪಿ.ವಿ ‘ಹ್ಯೂಮನ್ ಪ್ಯಾಪಿಲೋಮ ವೈರಸ್’ ವಿರುದ್ಧದ ಲಸಿಕೆ ಹಾಕಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಹಾಕಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸಹ ಕೋರಿದ್ದಾರೆ.
ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು ಅಸುರಕ್ಷಿತ ಲೈಂಗಿಕ ಸಂಪರ್ಕದಿAದ ಹರಡುವ ಹ್ಯೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್ ಆಗಿ ಬದಲಾಗುವ ಸಂಭವವಿರುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವ ರೋಗ ತಡೆಯಲು ಹೆಚ್.ಪಿ.ವಿ ಲಸಿಕೆಯನ್ನು ಮಾರ್ಗಸೂಚಿಯಡಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ವಿನಂತಿಸಿದ್ದಾರೆ.
WhatsApp Group Join Now
Telegram Group Join Now
Share This Article