ಹಂಪಿ|,ಎ,೧೫ : ಆಧುನಿಕ ಭಾರತದ ನವ ನಿರ್ಮಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಅತ್ಯಂತ ಅವಶ್ಯಕವಾಗಿವೆ. ಸಮಾಜದ ವಿವಿಧ ವಲಯಗಳಲ್ಲಿ ಅವರ ಚಿಂತನೆಗಳನ್ನು ಅನ್ವಯಿಸಿ ದೇಶದ ಭವಿಷ್ಯವನ್ನು ರೂಪಿಸಬೇಕು. ಅವರ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವೆಂದು ಡಾ. ಡಿ.ವಿ. ಪರಮಶಿವಮೂರ್ತಿ ಅವರು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಪುಷ್ಪಾರ್ಚನೆಯ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜನಸಾಮಾನ್ಯರ ನಡುವೆ ಕಳೆದ ಐದು ದಶಕಗಳಿಂದ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ತತ್ವಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಪ್ರಮುಖವಾಗಿವೆ ಎಂದು ಅವರು ತಿಳಿಸಿದರು. ಭಾರತದ ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಗಳ ಮೇಲೆ ಅವರ ತತ್ವಗಳು ಮಹತ್ವದ ಪ್ರಭಾವ ಬೀರಿವೆ ಎಂದು ಹೇಳಿದರು.
ಅಂಬೇಡ್ಕರ್ ಅವರ ಆಲೋಚನೆಗಳು ದಿನೇ ದಿನೇ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿವೆ. ಒಬ್ಬ ವ್ಯಕ್ತಿ ಎಷ್ಟೆಲ್ಲಾ ಚಿಂತನೆಯನ್ನು ಮಾಡಿದ್ದಾರೆ ಎಂದರೆ ಆಶ್ಚರ್ಯವಾಗುತ್ತದೆ. ರಾಜಕೀಯವಾಗಿ ಮೀಸಲಾತಿ ವಿಷಯವನ್ನು ಹೊರತುಪಡಿಸಿದರೆ, ಅವರ ಹಲವಾರು ವಿಚಾರಗಳು ಇನ್ನೂ ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂದು ಹೇಳಿದರು. ಅಂಬೇಡ್ಕರ್ ಅವರನ್ನು ಕೇವಲ ಹೋರಾಟಗಾರರಾಗಿ ಅಥವಾ ಹಕ್ಕುಗಳ ಪ್ರತಿಪಾದಕರಾಗಿ ಮಾತ್ರ ನೋಡದೇ, ಸಮಾಜಕ್ಕೆ ಉತ್ತಮ ದಾರಿಯನ್ನು ತೋರಿದ ಮಾರ್ಗದರ್ಶಕರಾಗಿ ಗುರುತಿಸಬೇಕೆಂದು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಅಂಬೇಡ್ಕರ್ ಅವರ ಕುರಿತು ಹತ್ತು ಪುಸ್ತಕಗಳನ್ನು ಪ್ರಕಟಿಸುತ್ತಿದೆ. ಅವುಗಳನ್ನು ಸಧ್ಯದಲ್ಲಿಯೇ ಬಿಡುಗಡೆಗೊಳಿಸಲಾಗುವುದು. ಇಂದಿನ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ ಮಾತನಾಡುತ್ತಾ, ರಿಸರ್ವ್ ಬ್ಯಾಂಕ್ ಪರಿಕಲ್ಪನೆ ಸೇರಿದಂತೆ ಮಹಿಳೆಯರ ಹಕ್ಕುಗಳ ಸ್ಥಾಪನೆಗೂ ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ತಿಳಿಸಿದರು. ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಎಂಬ ಮೌಲ್ಯಗಳನ್ನು ಸಂವಿಧಾನದಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನರಾಗಿದ್ದ ಅಂಬೇಡ್ಕರ್, ಮನುಷ್ಯರ ಸರ್ವತೋಮುಖ ಅಭಿವೃದ್ಧಿಗಾಗಿ ಸದಾ ಕನಸು ಕಂಡಿದ್ದರು ಎಂದು ಹೇಳಿದರು. ಅವರ ಆಶಯಗಳಲ್ಲಿ ದೇಶದ ಸಮಾನತೆಯ ಅಭಿವೃದ್ಧಿ ಅಡಗಿದ್ದು, ಆ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಕುಲಸಚಿವರಾದ ಶ್ರೀ ಬಿ. ಗುರುಬಸಪ್ಪ ಸ್ವಾಗತಿಸಿದರು. ಆರ್.ವಿ. ದೇಶಪಾಂಡೆ ವಂದಿಸಿದರು, ಈ ಸಂದರ್ಭದಲ್ಲಿ ಅಧ್ಯಯನಾಂಗದ ನಿರ್ದೇಶಕರು, ವಿವಿಧ ವಿಭಾಗಗಳ ಡೀನರು, ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು, ಸ್ವಚ್ಛತಾ ಸಿಬ್ಬಂದಿಗಳು, ಉಪಸ್ಥಿತರಿದ್ದರು.
೧.ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರೊಂದಿಗೆ ಅಧ್ಯಯನಾಂಗದ ನಿರ್ದೇಶಕರು, ಪ್ರಾಧ್ಯಾಪಕರು, ಅಧಿಕಾರಿಗಳು, ವಿಶ್ವವಿದ್ಯಾಲಯದ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
೨. ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೩. ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ ಮಾತನಾಡಿದರು.


