ಬಳ್ಳಾರಿ, ಏ.15: ತಾಲೂಕಿನ ಚೆಳಗುರ್ಕಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಹಾಗೂ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಹಾಗೂ ಮಾಜಿ ಅರೆಸೈನಿಕರಾದ ಎಮ್ಮಿಗನೂರು ಶೇಖ್ ಸಾಬ್ ಮತ್ತು ಮಾಜಿ ಅರೆಸೈನಿಕ, ಭಾರತ ಸೇವಾ ರತ್ನ ಹಾಗೂ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಎನ್. ಪ್ರಹ್ಲಾದ ರೆಡ್ಡಿ ಉಪಸ್ಥಿತರಿದ್ದು ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆಗಳ ಕುರಿತು ವಿಶ್ಲೇಷಣಾತ್ಮಕವಾಗಿ ಮಾತನಾಡಿದರು.
ಪ್ರಹಲ್ಲಾದ್ ರೆಡ್ಡಿ ಅವರು ಮಾತನಾಡಿ, 1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಹೂ ಮಿಲಿಟರಿ ಕ್ಯಾಂಪ್ನಲ್ಲಿ ಜನಿಸಿದ ಡಾ. ಅಂಬೇಡ್ಕರ್ ಅವರು ತಮ್ಮ ಶಿಕ್ಷಣದ ಮೂಲಕ ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. ಲಂಡನ್ನಲ್ಲಿ ಪಿಎಚ್ಡಿ ಪದವಿ ಪಡೆದು, ಸಮಾಜದ ಶೋಷಿತ ವರ್ಗಗಳ ಅಪ್ ಲಿಫ್ಟ್ ಮೆಂಟ್ ಗಾಗಿ ಅನೇಕ ಹೋರಾಟಗಳನ್ನು ನಡೆಸಿದರು ಎಂದು ಹೇಳಿದರು. ಕಾರ್ಮಿಕರಿಗೆ ಎಂಟು ಗಂಟೆಗಳ ಕೆಲಸದ ಅವಧಿ, ಮಹಿಳೆಯರಿಗೆ ಹೆರಿಗೆ ರಜೆ, ಆಸ್ತಿ ಹಕ್ಕು ಮತ್ತು ಕನಿಷ್ಠ ವೇತನ ಸೇರಿದಂತೆ ಹಲವಾರು ಹಕ್ಕುಗಳನ್ನು ಕಲ್ಪಿಸುವಲ್ಲಿ ಅವರ ಕೊಡುಗೆ ಅನನ್ಯ ಎಂದು ವಿವರಿಸಿದರು.
1947ರಿಂದ 1951ರವರೆಗೆ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಸಚಿವರಾಗಿ ಸೇವೆ ಸಲ್ಲಿಸಿದ ಅವರು, ಭಾರತೀಯ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1950ರ ಜನವರಿ 26ರಂದು ಜಾರಿಗೆ ಬಂದ ಸಂವಿಧಾನವು ವಿಶ್ವದ ಅತಿ ದೀರ್ಘ ಲಿಖಿತ ಸಂವಿಧಾನವಾಗಿದ್ದು, ಅನೇಕ ತಿದ್ದುಪಡಿಗಳ ಮೂಲಕ ಇನ್ನಷ್ಟು ಸಮಗ್ರವಾಗಿದೆ ಎಂದು ತಿಳಿಸಿದರು. 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದ ಅಂಬೇಡ್ಕರ್ ಅವರು ಅದೇ ವರ್ಷದ ಡಿಸೆಂಬರ್ 6ರಂದು ನಿಧನರಾದರು. 1990ರಲ್ಲಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮದ ದಲಿತ ಮುಖಂಡರು, ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಅತಿಥಿಗಳನ್ನು ಸನ್ಮಾನಿಸಲಾಯಿತು.


