ಬಳ್ಳಾರಿ,ಏ.18..: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಹಲಕುಂದಿ ಗ್ರಾಮದ ಎಸ್.ಸಿ ಕಾಲೋನಿಯ ಮನೆಗಳನ್ನು ರೈಲ್ವೆ ಹಳಿ ನಿರ್ಮಾಣದ ನಿಮಿತ್ತ ತೆರವುಗೊಳಿಸುವ ಪ್ರಕ್ರಿಯೆ ಹಿನ್ನೆಲೆಯಲ್ಲಿ, ಮನೆ ಕಳೆದುಕೊಳ್ಳುವ ಕುಟುಂಬಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಈ ಸಂಬಂಧ ಶಾಸಕ ಬಿ. ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಅವರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಮತ್ತು ಲಿಡ್ಕರ್ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ್ ಅವರು ಗ್ರಾಮಸ್ಥರೊಂದಿಗೆ ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರನ್ನು ಭೇಟಿ ಮಾಡಿದರು.
ಈ ವೇಳೆ ಗ್ರಾಮಸ್ಥರ ಪರವಾಗಿ ಮನವಿ ಸಲ್ಲಿಸಿದ ಅವರು, ಹಲವು ವರ್ಷಗಳಿಂದ ವಾಸಿಸುತ್ತಿರುವ ಕುಟುಂಬಗಳು ಅನಾಥವಾಗದಂತೆ, ಸರ್ಕಾರ ಮಾನವೀಯ ದೃಷ್ಟಿಯಿಂದ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ವಿನಂತಿಸಿದರು.
ಮನೆ ತೆರವು ಪ್ರಕ್ರಿಯೆ ನಡೆಯುವ ಮುನ್ನವೇ ಪುನರ್ವಸತಿ ವ್ಯವಸ್ಥೆಯನ್ನು ಸಕಾಲದಲ್ಲಿ ಒದಗಿಸುವುದು ಅಗತ್ಯ ಎಂದು ತಿಳಿಸಿದರು.
ಮನೆ ಕಳೆದುಕೊಳ್ಳುತ್ತಿರುವ ಕುಟುಂಬಗಳಿಗೆ ನ್ಯಾಯಸಮ್ಮತ ಕಾನೂನು ಬದ್ಧವಾಗಿ ಪರಿಹಾರ ನೀಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳಿರುವ ಸುರಕ್ಷಿತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗದ ಸದಸ್ಯ ಸಿಂಧುವಾಳ ಗಾದಿ ಲಿಂಗನಗೌಡ ಸೇರಿದಂತೆ ಇತರೆ ಮುಖಂಡರು ಮತ್ತು ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.


