ಜಿ.ಟಿ.ಮಾಲ್​ ಒಂದು ವಾರ ಮುಚ್ಚಿಸಲು ಕ್ರಮ

Ravi Talawar
ಜಿ.ಟಿ.ಮಾಲ್​ ಒಂದು ವಾರ ಮುಚ್ಚಿಸಲು ಕ್ರಮ
WhatsApp Group Join Now
Telegram Group Join Now

ಬೆಂಗಳೂರು: ಹಾವೇರಿಯ ರೈತರೊಬ್ಬರಿಗೆ ಅವಮಾನ ಮಾಡಿದ ನಗರದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ಅನ್ನು 7 ದಿನ ಮುಚ್ಚಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ರೈತರೊಬ್ಬರನ್ನು ಮಾಲ್‌ಗೆ ಬಿಡದೆ ಅವಮಾನ ಮಾಡಿರುವುದನ್ನು ಪಕ್ಷಬೇಧ ಮರೆತು ಸದನದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವರು, ರೈತನಿಗೆ ಅವಮಾನ ಮಾಡಿದ ಮಾಲ್ ಅ​ನ್ನು ಒಂದು ವಾರ ಮುಚ್ಚಿಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್‌, ಗ್ರಾಮೀಣ ಭಾಗದಿಂದ ಬಂದ ಯುವಕ ತಮ್ಮ ತಂದೆಯನ್ನು ಮಾಲ್‌ಗೆ ಕರೆದೊಯ್ದಾಗ ಅಲ್ಲಿ ಆ ರೈತನನ್ನು ಮಾಲ್‌ನೊಳಗೆ ಬಿಡಲಿಲ್ಲ. ಆ ರೈತ ಕರ್ನಾಟಕದ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು. ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಒಳಬಿಟ್ಟಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರ ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಎಲ್ಲಾ ಮಾಲ್​ಗಳಿಗೂ ಸಂದೇಶ ರವಾನಿಸಬೇಕು ಎಂದರು. ಇದೇ ವೇಳೆ, ಮಾಲ್​ನ ಮಾಲೀಕರು ಎಷ್ಟೇ ಶ್ರೀಮಂತರಾದರೂ ಅದು ಮುಖ್ಯವಲ್ಲ. ಕಟ್ಟಕಡೇಯ ಜನರಿಗೆ ಸ್ಪಂದಿಸುವುದು ಮುಖ್ಯ ಎಂದು ಸ್ಪೀಕರ್ ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ, ಮಾಲ್‌ ವಿರುದ್ಧ ಕಠಿಣ ಕ್ರಮ ಎಂದು ಹೇಳಿದರೆ ಆಗದು. ಒಂದು ವಾರಗಳ ವಿದ್ಯುತ್​ ಕಡಿತಗೊಳಿಸಿ, ಆಗ ತಕ್ಕ ಪಾಠ ಆಗುತ್ತದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿ ರೈತರ ಸಮವಸ್ತ್ರಕ್ಕೆ ಬೆಲೆ ಕೊಡದ ಮಾಲ್​ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಶಾಸಕ ಪ್ರಕಾಶ್​ ಕೋಳಿವಾಡ ಮಾತನಾಡಿ, ಅವರು ನಮ್ಮ ಕ್ಷೇತ್ರದ ಅರೆಮಲ್ಲಾಪುರ ಗ್ರಾಮದ ರೈತರು. ಅವರಿಗೆ 9 ಜನ ಮಕ್ಕಳಿದ್ದಾರೆ. ಎಲ್ಲರಿಗೂ ಶಿಕ್ಷಣ ಕೊಡಿಸಿದ್ದಾರೆ. ಒಬ್ಬ ಪುತ್ರ ಎಂಬಿಎ ಓದುತ್ತಿದ್ದು, ಆ ಮಗನನ್ನು ನೋಡಲು ಬಂದಿದ್ದಾಗ ಮಗ ಜಿ.ಟಿ.ಮಾಲ್‌ಗೆ ಕರೆದುಕೊಂಡು ಹೋಗಿದ್ದರು. ಅನ್ನದಾತನಿಗೆ ಅವಮಾನ ಮಾಡಿದ ಮಾಲ್ ಮುಚ್ಚಿಸಬೇಕೆಂದು ಒತ್ತಾಯಿಸಿದರು.

 

WhatsApp Group Join Now
Telegram Group Join Now
Share This Article