ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನ ನಡೆಸಿದಾಗ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ವಿಧಾನಸೌಧ ಮುಂಭಾಗ ಆರ್ಸಿಬಿ ಕಾರ್ಯಕ್ರಮ ಆಯೋಜಿಸಿದ್ದು ಕಾಂಗ್ರೆಸ್ ಸರ್ಕಾರ, ಆರ್ಸಿಬಿ ಅಭಿಮಾನಿಗಳನ್ನು ಸ್ಟೇಡಿಯಂಗೆ ಕಳಿಸಿದ್ದು ಸರ್ಕಾರ, ಆರ್ಸಿಬಿ ಅಭಿಮಾನಿಗಳ ದಾರುಣ ಸಾವಿಗೆ ಕಾರಣವಾಗಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಗೃಹ ಸಚಿವ ಪರಮೇಶ್ವರ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯ ವೇದಿಕೆಯಲ್ಲಿ ಅಣಕು ಕಪ್ ಪ್ರದರ್ಶನ ಮಾಡಲಾಯಿತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮುಖವಾಡ ಧರಿಸಿದ ಕಾರ್ಯಕರ್ತರು ಅಣಕು ಕಪ್ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಕೆಲ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು,ವಶಕ್ಕೆ ಪಡೆದುಕೊಂಡರು.