ಬಳ್ಳಾರಿ, ಏ.09.: ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬಳ್ಳಾರಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಂಗಳವಾರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಕೇಂದ್ರ ಸ್ಥಾನಿಕ ಅಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಕೃಷ್ಣಮೂರ್ತಿ (ಅಕ್ಕಿಕೃಷ್ಣ), ಎಪಿಎಂಸಿಯಲ್ಲಿ ಶೇಂಗಾ, ಜೋಳ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ತಂದು ಮಾರಾಟ ಮಾಡುವ ರೈತರಿಗೆ ಜಾಗದ ಕೊರತೆ ಉಂಟಾಗಿದೆ ಎಂದು ಹೇಳಿದರು.
ಆಂಧ್ರ ಪ್ರದೇಶದ ಉರುವಕೊಂಡ, ರಾಯದುರ್ಗ ಹಾಗೂ ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ತರಲಾಗುವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ರಸ್ತೆಗಳಲ್ಲಿ ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಲಾರಿಗಳು ಬೆಳೆಗಳ ಮೇಲೆ ಸಂಚರಿಸಿ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಅವರು ದೂರಿದರು.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರಿಗೆ ಸೂಕ್ತ ಸ್ಥಳಾವಕಾಶ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬೇವಿನಗಿಡದ ರವಿಸ್ವಾಮಿ, ಕೊಳಗಲ್ಲು ತಿಮ್ಮಪ್ಪ, ಬೈಲೂರು ವೀರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


