ಬೆಂಗಳೂರು, (ಅಕ್ಟೋಬರ್ 16): ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಇಂದು (ಅಕ್ಟೋಬರ್ 16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು, ಸರ್ಕಾರಿ ಆಸ್ತಿಗಳಲ್ಲಿ ಯಾವುದೇ ಖಾಸಗಿ ಸಂಘಟನೆ, ಆರ್ಎಸ್ಎಸ್ ಸೇರಿದಂತೆ, ಯಾವುದೇ ಸಭೆ, ಸಮಾರಂಭ ಅಥವಾ ಚಳುವಳಿಗಳಿಗೆ ಪೊಲೀಸ್ ಅನುಮತಿ ಮತ್ತು ಸಂಬಂಧಿತ ಇಲಾಖೆಯ ಅಧಿಕಾರಿಗಳಿಂದ ಪೂರ್ವಾನುಮತಿ ಕಡ್ಡಾಯವಾಗಿದೆ ಎಂದು ನಿರ್ಧರಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಈ ನಿಯಮವು ಆರ್ಎಸ್ಎಸ್ಗೆ ಮಾತ್ರವಲ್ಲ, ಎಲ್ಲ ಖಾಸಗಿ ಸಂಘ ಸಂಸ್ಥೆಗಳಿಗೂ ಅನ್ವಯವಾಗಲಿದೆ. ವಿಶೇಷವಾಗಿ, ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಯಾವುದೇ ಚಟುವಟಿಕೆಗೆ ಇನ್ಮುಂದೆ ಅನುಮತಿ ಕಡ್ಡಾಯವಾಗಿದೆ.