ಬೆಂಗಳೂರು, ಸೆಪ್ಟೆಂಬರ್ 30: ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಜನರ ಬದುಕು ಪ್ರವಾಹದಿಂದ ಬೀದಿಗೆ ಬಿದ್ದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಖೇಡಗಿ ಗ್ರಾಮಕ್ಕೆ ಪ್ರವಾಹ ನುಗ್ಗಿದೆ. 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದ್ದು, ಆಂಜನೇಯ ಸ್ವಾಮಿ ದೇಗುಲ, ಲಾಲ್ಸಾಬ್ ದರ್ಗಾ, ಬಸವಣ್ಣ ದೇವಸ್ಥಾನಗಳು ಜಲಾವೃತವಾಗಿವೆ. ಜನರು ತೆಪ್ಪದಲ್ಲೇ ಓಡಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಭೀಮಾನದಿ ಆರ್ಭಟಕ್ಕೆ ಭೀಕರ ಪ್ರವಾಹ ಉಂಟಾಗಿದ್ದು, ಈಡೀ ಬಸವೇಶ್ವರ ಮಠ ಜಲಾವೃತವಾಗಿದೆ. ಕುತ್ತಿಗೆವರೆಗೂ ನೀರು ಬಂದ್ರೂ ಕಾಂತಯ್ಯ ಎಂಬುವವರು ಈಜಿಕೊಂಡು ಹೋಗಿ ಪೂಜೆ ಸಲ್ಲಿಸಿದ್ದಾರೆ. ಪ್ರವಾಹ ಇದ್ದರೂ ಮಠದಲ್ಲಿ ಪೂಜೆ ನಿಲ್ಲಿಸಲ್ಲ ಎಂದು ಹೇಳಿದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರದ ರೋಜಾ ಗ್ರಾಮ ಪ್ರವಾಹದಿಂದ ನಡುಗಡ್ಡೆಯಾಗಿದ್ದು, ಮೂಕ ಪ್ರಾಣಿಗಳ ರೋದನೆ ಹೇಳತೀರದಾಗಿದೆ. ಜಾನುವಾರಗಳಿಗೆ ತಿನ್ನಲು ಮೇವು ಇಲ್ಲದೆ ಜನ ಪರದಾಡುತ್ತಿದ್ದಾರೆ. ಬೋಟ್ನಲ್ಲಿ ಮೇವು ತರುವ ಸ್ಥಿತಿ ನಿರ್ಮಾಣವಾಗಿದೆ.ನಿರಂತರ ಮಳೆಗೆ ರಾಯಚೂರಿನಲ್ಲೂ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಹತ್ತಿ ಬೆಳೆ ನಾಶವಾಗಿದೆ. ಎಕರೆಗೆ 20-30 ಸಾವಿರ ಖರ್ಚು ಮಾಡಿರುವ ಜನಪ್ರತಿನಿಧಿಗಳುಮತ್ತು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಘಟಪ್ರಭಾ ಆಬ್ಬರಕ್ಕೆ ಸಂಕಷ್ಟಗಳ ಪ್ರವಾಹ ಉಂಟಾಗಿದೆ. ಹುಕ್ಕೇರಿ ತಾಲೂಕಿನ ಜಿನ್ರಾಳದಲ್ಲಿ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ, ಕಬ್ಬು ಬೆಳೆಗಳು ಸರ್ವನಾಶವಾಗಿವೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.


