ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಿದ್ದು, ಇದರ ಬೆನ್ನಲ್ಲೇ ವಿಜಯನಗರದ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದಾಗಿದ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಸರ್ಕಾರವು ತನ್ನ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ‘ಸಾಧನಾ ಸಮಾವೇಶ’ ರ್ಯಾಲಿ ನಡೆಸಲು ಮುಂದಾಗಿತ್ತು. ಆದರೆ, ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ರ್ಯಾಲಿಯನ್ನು ಮುಂದೂಡಲಾಗಿತ್ತು.
ಇದೀಗ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುದ್ಧ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಘಟನೆಗೆ ಸಿದ್ಧರಾಗಿರುವಂತೆ ಸೂಚನೆ ನೀಡಿದ್ದರು. ನಂತರ ಕದನ ವಿರಾಮ ಘೋಷಣೆಯಾದ ಬಳಿಕ ಸರ್ಕಾರದ ನಿರ್ಣಯವನ್ನು ಸ್ವಾಗತಿಸಿದ್ದರು.
ಬಳಿಕ ಮೇ 20 ರ ರ್ಯಾಲಿಗೆ ಸಿದ್ಧತೆಗಳ ನಡೆಸುವಂತೆ ವಿಜಯನಗರ ಜಿಲ್ಲಾಧಿಕಾರಿಗೆ ಭಾನುವಾರ ಬೆಳಿಗ್ಗೆ ಸೂಚನೆ ನೀಡಿದ್ದಾರೆ.