ಬಳ್ಳಾರಿ,ಆ.16.. ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ ೨೦೨೫ರಲ್ಲಿ ನಡೆಯುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಟಿ ಬಿ ಡ್ಯಾಮ್ ನ ವೈಕುಂಠ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಆದಷ್ಟು ಶೀಘ್ರವೇ ಸ್ವಾಗತ ಸಮಿತಿಯನ್ನು ರಚನೆ ಮಾಡಿ ಸಮ್ಮೇಳನದ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಮನವಿ ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮನವಿ ಮಾಡಿದರು.
ಕನ್ನಡ ಸಂಸ್ಕೃತಿ ಇಲಾಖೆಯ ವಾರ್ಷಿಕ ಕ್ರಿಯೆ ಯೋಜನೆಯಲ್ಲಿ ೧೦ ಕೋಟಿ ರೂಪಾಯಿಗಳ ಅನುದಾನವನ್ನು ಸಮ್ಮೇಳನಕ್ಕೆ ನಿಗದಿಗೊಳಿಸಲಾಗಿದೆ. ೬೮ ವರ್ಷಗಳ ನಂತರ ಗಡಿ ಜಿಲ್ಲೆ ಬಳ್ಳಾರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೂ ಹೆಚ್ಚುವರಿಯಾಗಿ ೩೦ ಕೋಟಿ ರೂಪಾಯಿಗಳ ಅನುದಾನವನ್ನು ನೀಡಬೇಕೆಂದು ಮನವಿ ಕೋರಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಮನವಿಗೆ ಸ್ಪಂದಿಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಅತ್ಯಂತ ವೈಭವ ಪೂರ್ಣವಾಗಿ ಮತ್ತು ಅರ್ಥಪೂರ್ಣವಾಗಿ ನಡೆಸಲು ಸಕಲ ರೀತಿಯ ನೆರವನ್ನು ಸರ್ಕಾರದಿಂದ ನೀಡುವುದಾಗಿ ತಿಳಿಸಿದರು.
ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಬಳ್ಳಾರಿಗೆ ಬಂದು ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರು ಒಳಗೊಂಡು ಸ್ವಾಗತ ಸಮಿತಿಯನ್ನು ರಚಿಸುವ ಮೂಲಕ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕು ಅಧ್ಯಕ್ಷ ಡಾ. ಗುಂಡಿ ಮಾರುತಿ, ಹೂಡ ಅಧ್ಯಕ್ಷ ನಿಯಾಜಿ, ಸಂಚಾಲಕರಾದ ಕಪ್ಪುಗಲ್ಲು ಬಿ. ಚಂದ್ರಶೇಖರ ಆಚಾರ್, ಚಿತ್ರ ಕಲಾವಿದ ಮಂಜುನಾಥ ಗೋವಿಂದವಾಡ, ಸಂಘಟನಾ ಕಾರ್ಯದರ್ಶಿ ಸಿದ್ಧರಾಮಪ್ಪ ಮತ್ತಿತರರು ಉಪಸ್ಥಿತರಿದ್ದರು.