ಇಂಡಿ: ಸಾಮಾಜಿಕ ನ್ಯಾಯದ ಹರಿಕಾರರಾದ ಡಿ.ದೇವರಾಜ ಅರಸು ಅವರ ದೂರದೃಷ್ಟಿ ಮತ್ತು ಬದ್ಧತೆ ರಾಜ್ಯದ ಅಭಿವೃದ್ಧಿಗೆ ದಾರಿದೀಪವಾಗಿದೆ. ಅವರ ಕಾರ್ಯ ಮತ್ತು ಕೊಡುಗೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ನಾಡಿನ ಸಾಮಾಜಿಕ, ಶಿಕ್ಷಣ, ಆರ್ಥಿಕ ಕ್ಷೇತ್ರದಲ್ಲಿ ಪರಿವರ್ತನೆ ತಂದ ಅರಸು ಅವರು ದುರ್ಬಲ ವರ್ಗದವರಲ್ಲಿ ಸ್ವಾಭಿಮಾನದ ಕಲ್ಪನೆ ಹುಟ್ಟಿಸಿ ಅವರಿಗೆ ಆರ್ಥಿಕ ಸ್ವಾವಲಂಬನೆ ಒದಗಿಸಿದ ಯುಗಪುರುಷರಾಗಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು ಕರ್ನಾಟಕದಲ್ಲಿ ಅನೇಕ ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಯಶಸ್ಸು ಸಾಧಿಸಿದ
ಮಹಾಮಾನವತಾವಾದಿಯಾಗಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಇಂಗ್ಲೀಷ್ ಕೈಬರಹ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ನೋಟ್ ಬುಕ್-ಪೆನ್ನು ವಿತರಿಸಲಾಯಿತು.
ಶಿಕ್ಷಕಿ ಎನ್ ಬಿ ಚೌಧರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.
ಸರಳ, ನೇರ ಮತ್ತು ನಿರ್ಭೀತ ಆಡಳಿತಕ್ಕೆ ಹೆಸರಾದ ಅರಸು ಅವರು ಜನಸಾಮಾನ್ಯರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಅವರು ಎಂದೆಂದಿಗೂ ಚಿರಸ್ಥಾಯಿಯಾಗಿದ್ದಾರೆ.