ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಮಾಧ್ಯಮ ಅವಶ್ಯಕ : ದಿವ್ಯ ಪ್ರಭು

Hasiru Kranti
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಮಾಧ್ಯಮ ಅವಶ್ಯಕ : ದಿವ್ಯ ಪ್ರಭು
WhatsApp Group Join Now
Telegram Group Join Now
ಧಾರವಾಡ :  ಕಾಯಾರ್ಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ  ಅಗತ್ಯವಿದೆ. ವಿಶೇಷವಾಗಿ ಅನೇಕರು ಮಾಧ್ಯಮದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳನ್ನು ಹೆದರಿಸುವ, ಒತ್ತಡಕ್ಕೆ ಒಳಪಡಿಸುವ ಕಾರ್ಯಮಾಡುತ್ತಿದ್ದು, ಸರ್ಕಾರಿ ನೌಕರರಲ್ಲಿ ಮಾಧ್ಯಮಗಳ ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರಿಗೆ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
 ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ 2025-28 ನೇ ಅವಧಿಯ ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳಿಗೆ ಮಾಧ್ಯಮದ ಹೆಸರಿನಲ್ಲಿ ಇತರರು ಭೇಟಿ ನೀಡಿ, ಮಾಹಿತಿ ಕೇಳುವ ಅಥವಾ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ಹೆಸರಿನಲ್ಲಿ ಹೆದರಿಸುವ, ಹಣ ಕೇಳುವ ಘಟನೆಗಳು ಜರಗುತ್ತವೆ. ಬೇರೆ ಜಿಲ್ಲೆಗಳಿಗೆ ಹೊಲಿಸಿದಾಗ ಧಾರವಾಡ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆ. ಆದರೂ ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಠಿಯಿಂದ ಸಿಗಬೇಕಾದ ಮಾಹಿತಿ ಮತ್ತು ಗೌರವ ನೀಡಲು ಅಧಿಕಾರಿ, ಸಿಬ್ಬಂದಿಗಳಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಸಂವಿಧಾನದ 19ನೇ ಅನುಸೂಚಿಯಲ್ಲಿ ವಾಕ್ ಸ್ವಾತಂತ್ರದ ಬಗ್ಗೆ ತಿಳಿಸಲಾಗಿದೆ. ಅದರಡಿಯಲ್ಲಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಕರ್ನಾಟಕದ ಬೆಂಗಳೂರು, ಮೈಸೂರು, ಕಲಬುರ್ಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮಾಧ್ಯಮದವರು ಒಳ್ಳೆಯ ಸಹಕಾರ ನೀಡಿದ್ದಾರೆ. ಸಮಸ್ಯೆಗಳ ಕುರಿತು ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನು ಸಹ ನೀಡಿರುವರು. ಒಳ್ಳೆಯ ಕೆಲಸಗಳಿಗೆ ಸಹ ಬೆನ್ನು ತಟ್ಟಿ ಪೋತ್ರಾಹಿಸಿದರು ಎಂದರು.
ವಿವಿಧ ಕ್ಷೇತ್ರದ ಸಾಧಕರನ್ನು ಜಿಲ್ಲಾಡಳಿತದಿಂದ ಪ್ರತಿ ವರ್ಷ ಸನ್ಮಾನಿಸಲಾಗುತ್ತದೆ ಆದರೆ ಇದೇ ಮೊದಲ ಬಾರಿಗೆ ಪತ್ರಕರ್ತ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಗುತ್ತಿದೆ. ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಮಾಧ್ಯಮದ ಅಗತ್ಯತೆ ಇದೆ. ಸರಿಯಾದ ಮಾಹಿತಿ ಪಡೆದು ಸರಿಯಾದ ನಿರ್ಧಾರ ಕೈಗೊಳ್ಳಲಾಗಿದೆ. ಸರಿಪಡಿಸಬಹುದಾದ ವಿಷಯಗಳನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ. ಸರ್ಕಾರದಿಂದ ಪತ್ರಕರ್ತರಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಮಾಧ್ಯಮ ಅವಶ್ಯಕ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಭಾವನೆಯನ್ನು ಮಾಧ್ಯಮ ಮತ್ತು ಜಿಲ್ಲಾಡಳಿತ ಹೊಂದಿವೆ. ನಾನು ಕೂಡ ಬಿಎಸ್ಸಿ ಅಗ್ರಿ ಓದುವಾಗ ಫಾರ್ಮ್ ಜರ್ನಲಿಸಂ ಕಲಿತಿದ್ದೇನೆ. ಹೀಗಾಗಿ ಪತ್ರಿಕಾ ರಂಗದ ಸವಾಲುಗಳು ನನಗೆ ತಿಳಿದಿವೆ. ಯಶಸ್ಸಿನ ಬಗ್ಗೆ ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳದೆ ನಮ್ಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಸಾಗಬೇಕು ಎಂದು ಅವರು ತಿಳಿಸಿದರು.
*ತಾಲೂಕು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾಧ್ಯಮದ ಕುರಿತು ಕಾರ್ಯಾಗಾರ:* ಹುಬ್ಬಳ್ಳಿಯಲ್ಲಿ ಹಿಂದೆ ಸಂಪಾದಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ನಿಜವಾದ ಪತ್ರಕರ್ತರಿಗೆ ಮಾಹಿತಿ ನೀಡುವಲ್ಲಿ ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ. ನಿಜವಾದ ಪತ್ರಕರ್ತರಿಗೆ ಇಲಾಖೆಗಳ ಮಾಹಿತಿ ದೊರೆಯಬೇಕಿದೆ ಆ ನಿಟ್ಟಿನಲ್ಲಿ ತಾಲೂಕು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾಧ್ಯಮದ ಕುರಿತು ಕಾರ್ಯಗಾರವನ್ನು ಏರ್ಪಡಿಸಲಾಗುವುದು. ಅಲ್ಲದೆ ಮಾಧ್ಯಮದ ಕುರಿತು ಅಧಿಕಾರಿಗಳಲ್ಲಿ ಇರುವ ಗೊಂದಲವನ್ನು ನಿವಾರಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ, ಬಜೆಟ್ ಸೇರಿದಂತೆ ವಿವಿಧ ವಿಷಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ದೇಶದ ನಾಗರಿಕರಿಗೆ ಸಿಗುವ ಅವಕಾಶಗಳ ಬಗ್ಗೆ ತಿಳಿಯಪಡಿಸಲಾಗುವುದು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಘನತೆ, ಸ್ಥಾನವಿದೆ. ಕೆಲವು ಸ್ವಾತಂತ್ರ್ಯ ಹೋರಾಟದ ನಾಯಕರು ಲೇಖನಿ ಮತ್ತು ಪತ್ರಿಕೆಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. ಹೊಸ ಹೊಸ ತಂತ್ರಜ್ಞಾನದ ಬಳಕೆ ಬಗ್ಗೆ ಅರಿತುಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾಗುವ ಸುದ್ದಿಗಳಿಗೆ ಯಾವುದೇ ರೀತಿಯ ಗಟ್ಟಿತನ ಇರುವುದಿಲ್ಲ. ಪ್ರತಿನಿತ್ಯವೂ ಸಾಕಷ್ಟು ಸಮಸ್ಯೆಗಳು ನಮಗೆ ಬರುತ್ತವೆ. ಅವುಗಳನ್ನು ಪರಿಹರಿಸಲು ಕ್ರಮವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾದ ಬಂಡು ಕುಲಕರ್ಣಿ ಮಾತನಾಡಿ, ಸೌಹಾರ್ದಯುತ ಸನ್ಮಾನ ಕಾರ್ಯಕ್ರಮ ನಿಜಕ್ಕೂ ಅಚ್ವರಿ ತಂದಿದೆ. ಇಲ್ಲಿಯ ನೆಲದ ಗುಣವೇ ಸೌಹಾರ್ದಯುತವಾಗಿ ಇರುವುದಾಗಿದೆ. ಪತ್ರಕರ್ತರ ಕಾರ್ಯಾಗಾರ ಹಮ್ಮಿಕೊಂಡರೆ ಜಿಲ್ಲಾಡಳಿತದೊಂದಿಗೆ ಸಂಘ ಕೈ ಜೋಡಿಸಲಿದೆ. ಅವರವರ ಜವಾಬ್ದಾರಿ ಅವರೇ ಮಾಡಿದರೆ ಉತ್ತಮ ಎಂದರು.
ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮೋಹನ ಹೆಗಡೆ ಮಾತನಾಡಿ, ಎರಡು ವರ್ಷದ ಹಿಂದೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಸ್ವಾತಂತ್ರ್ಯ, ಕರ್ನಾಟಕ ಚಳುವಳಿ, ಕರ್ನಾಟಕ ಶಬ್ಧ ಉತ್ಪತ್ತಿ ಸೇರಿದಂತೆ ಹಲವು ಹೋರಾಟಗಳಿಗೆ ಧಾರವಾಡ ಜಿಲ್ಲೆ ತನ್ನದೇಯಾದ ಕೊಡುಗೆಗಳನ್ನು ನೀಡಿದೆ. ಗೌರವ ಗುಪ್ತಾ, ದರ್ಪನ್ ಜೈನ್ ಸೇರಿದಂತೆ ಹಲವು ಜಿಲ್ಲಾಧಿಕಾರಿಗಳು ಉತ್ತಮ ಸೇವೆ ಸಲ್ಲಿಸಿದ್ದಾರೆ. ಪತ್ರಿಕೋದ್ಯಮ ಬದಲಾಗುತ್ತಿದೆ. ಉತ್ತಮ ಆಡಳಿತ ವ್ಯವಸ್ಥೆಗೆ ಸಹಕಾರ ಅಗತ್ಯವಿದೆ. ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಅದರ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದು ಅವರು ಹೇಳಿದರು.
ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮಲ್ಲಿಕಾರ್ಜುನ ಸಿದ್ದಣ್ಣನವರ ಮಾತನಾಡಿ, ಒಳ್ಳೆಯ ಕಾರ್ಯಗಳಿಗೆ ಸಹಾಯ ಸಹಕಾರ ನೀಡುತ್ತೇವೆ. ಕ್ರಿಯಾಶೀಲ ಅಧಿಕಾರಿಗಳಿಗೆ ಎಲ್ಲ ರೀತಿಯ ವಾತಾವರಣ ಧಾರವಾಡದಲ್ಲಿದೆ. ಅಧಿಕಾರಿಗಳು ಮೈಯೆಲ್ಲ ಕಣ್ಣಾಗಿ ಕೆಲಸ ಮಾಡಬೇಕು. ಅಸಹಾಯಕರಿಗೆ ಧ್ವನಿಯಾಗಿ ಮಾಧ್ಯಮ ಕೆಲಸ ಮಾಡಬೇಕು. ಕ್ರಿಯಾಶೀಲ ಪ್ರತಕರ್ತರು ಜಿಲ್ಲೆಯಲ್ಲಿದ್ದಾರೆ ಎಂದರು.
ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಗುಂಜನ್ ಆರ್ಯ ಅವರು ಸ್ವಾಗತಿಸಿ, ಮಾತನಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಡಾ.ಸುರೇಶ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಸಾಕಷ್ಟು ಪತ್ರಕರ್ತರು ಬಂದಿದ್ದಾರೆ. ಅವರು ಧಾರವಾಡದ ಬಗ್ಗೆ ಹೆಚ್ವಿನ ಕಳಕಳಿ ಹೊಂದಿರುತ್ತಾರೆ. ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸ್ಪಂದನೆ ನೀಡುತ್ತಾರೆ. ಮಾಧ್ಯಮ ಸಂಪರ್ಕ ಉತ್ತಮವಾಗಿದ್ದರೆ, ಉತ್ತಮ ಆಡಳಿತ ನೀಡಬಹುದಾಗಿದೆ. ಜನರ ಹಿತದೃಷ್ಟಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಜೆ.ಅಬ್ಬಾಸ್ ಮುಲ್ಲಾ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಭಾಂಡಗೆ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ವೆಂಕಟರಾಜು ಕೆ.ಜಿ., ವಿಜಯವಾಣಿ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಪ್ರಕಾಶ ಶೆಟ್ ವೇದಿಕೆಯಲ್ಲಿ ಇದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಹಾಗೂ ಜಿಲ್ಲಾ ಕಾರ್ಯಕಾರಣಿ ಸದಸ್ಯರನ್ನು ಮತ್ತು ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀಪಾದ ಕುಲಕರ್ಣಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರಾದ ವಿಠ್ಠಲದಾಸ್ ಕಾಮತ್, ಷಣ್ಮುಖ ಕೋಳಿವಾಡ, ಗಿರೀಶ ಪಟ್ಟಣಶೆಟ್ಟಿ, ವೆಂಕಟೇಶ ಪ್ರಭು, ರಾಹುಲ ಬೆಳಗಲಿ ಹಾಗೂ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರತಿನಿಧಿಗಳು, ಧಾರವಾಡ ಪತ್ರಕರ್ತರು ಭಾಗವಹಿಸಿದ್ದರು.
ವಾರ್ತಾ ಇಲಾಖೆಯ ಸಿಬ್ಬಂದಿ ಕಾವ್ಯಾ ಗೌಡರ ಪ್ರಾರ್ಥಿಸಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
WhatsApp Group Join Now
Telegram Group Join Now
Share This Article