ಬೆಂಗಳೂರು, ಜ. 21: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಜಂಟಿಯಾಗಿ “ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ” ಬೆಂಗಳೂರಿನ ಅಶೋಕ ಹೋಟೆಲ್ನಲ್ಲಿ ಬುಧವಾರ ಸಚಿವರು ಭಾಷಣ ಮಾಡಿದರು.
ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರ ಪ್ರಾಬಲ್ಯ ಹೆಚ್ಚಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿಯೂ ಯಶಸ್ಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ, ಮಹಿಳೆಯರು ಈ ರೂಪಾಂತರದ ಕೇಂದ್ರದಲ್ಲಿದ್ದಾರೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಮೂಲಕ, ಮಹಿಳಾ ಸ್ವಸಹಾಯ ಗುಂಪುಗಳು ರಾಸಾಯನಿಕ-ಮುಕ್ತ, ಕಡಿಮೆ-ವೆಚ್ಚದ ನೈಸರ್ಗಿಕ ಕೃಷಿಯನ್ನು ಅಭ್ಯಾಸ ಮಾಡುತ್ತಿವೆ, ಕೃಷಿ ಸಖಿಗಳು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುತ್ತಿವೆ ಮತ್ತು ಜೈವಿಕ-ಇನ್ಪುಟ್ ಉತ್ಪಾದನೆ ಮತ್ತು ಮೌಲ್ಯವರ್ಧನೆಯಲ್ಲಿ ಪ್ರಮುಖ ಉದ್ಯಮಗಳನ್ನು ನಡೆಸುತ್ತಿವೆ. ಇದು ಗಮನಾರ್ಹ ವಿಷಯ ಎಂದು ಡಾ. ಪಾಟೀಲ್ ವಿವರಿಸಿದರು.
ನೈಸರ್ಗಿಕ ಕೃಷಿ ಪದ್ಧತಿಗಳು ಮಹಿಳೆಯರಿಗೆ ಕೌಶಲ್ಯಪೂರ್ಣ ಮತ್ತು ಗೌರವಾನ್ವಿತ ಗ್ರಾಮೀಣ ಉದ್ಯೋಗವನ್ನು ಸೃಷ್ಟಿಸಿವೆ. ಸುಮಾರು 5.26 ಲಕ್ಷ ಸ್ವಸಹಾಯ ಸಂಘದ ಸದಸ್ಯರು ಮಣ್ಣಿನ ಆರೋಗ್ಯ ನಿರ್ವಹಣೆ, ಹವಾಮಾನ-ಸ್ಥಿತಿಸ್ಥಾಪಕ ಬೆಳೆ ಪದ್ಧತಿಗಳು, ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳಲ್ಲಿ ಕೌಶಲ್ಯ ಹೊಂದುತ್ತಿದ್ದಾರೆ ಎಂದು ಡಾ. ಪಾಟೀಲ್ ತಿಳಿಸಿದರು.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಕೃಷಿ ಇಲಾಖೆಯಲ್ಲಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲು ಹೆಚ್ಚು ಕ್ರಮ ವಹಿಸಲಾಗುತ್ತದೆ ಎಂದರು.
ಕರ್ನಾಟಕದಲ್ಲಿ ಕೃಷಿ ವಲಯಕ್ಕೆ ಭರಪೂರ ಅನುದಾನವನ್ನು ಒದಗಿಸಲಾಗುತ್ತದೆ. ರೈತರು ಹಾಗೂ ಪ್ರಮುಖವಾಗಿ ರೈತ ಮಹಿಳೆಯರಿಗೆ ಸೌಲಭ್ಯಗಳನ್ನು ನೀಡಿ, ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ಒದಗಿಸಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾತಿ ಶರ್ಮಾ, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಅಭಿಯಾನದ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಹೆಚ್ಚುವರಿ ಅಭಿಯಾನ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣಪ್ರಕಾಶ ಪಾಟೀಲ್


