ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣ ಕಟ್ಟಡ ನಿರ್ಮಾಣಕ್ಕೆ 3.5 ಕೋಟಿ ಬಿಡುಗಡೆ; ಸಂತೋಷ ಲಾಡ

Ravi Talawar
ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣ ಕಟ್ಟಡ ನಿರ್ಮಾಣಕ್ಕೆ 3.5 ಕೋಟಿ ಬಿಡುಗಡೆ; ಸಂತೋಷ ಲಾಡ
WhatsApp Group Join Now
Telegram Group Join Now
ಧಾರವಾಡ
 2014 ರಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜದಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಈ ನೂತನ ಕಟ್ಟಡವು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು
ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಿ, ಮಾತನಾಡಿದರು.
ಮೊದಲು ಹಳ್ಳಿಗಳಲ್ಲಿ ಹೆಣ್ಣು ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಬಿಸಿ ಊಟ ಪ್ರಾರಂಭವಾದ ಮೇಲೆ ಬಡವರ ಮಕ್ಕಳಿಗೆ ಅನುಕೂಲವಾಗಿ ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದರು. ಆ ಸಮಯದಿಂದ ತರಗತಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳು ಸಮವಾಗಿರಲು ಆರಂಭವಾಯಿತು. ಆದರೆ ಈ ದಿನಮಾನಗಳಲ್ಲಿ ಕೆಲವೊಂದು ಶಾಲಾ ಕೊಠಡಿಗಳಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ ಕಾಣುತ್ತಿದ್ದಾರೆ ಎಂದು ಸಚಿವರು ಹೇಳಿದರು.
ಈಗೀನ ದಿನಮಾನಗಳಲ್ಲಿ ರಾಜ್ಯಮಟ್ಟದಲ್ಲಿ ಹೆಣ್ಣು ಮಕ್ಕಳು ಪ್ರಥಮ ಸ್ಥಾನ ಪಡೆಯುತ್ತಿದ್ದಾರೆ. ಹಾಗೆ ವಿಶ್ವವಿದ್ಯಾಲಯದಲ್ಲಿ ಮೊದಲನೆಯ ರ್ಯಾಂಕ್ ಕೂಡ ಹೆಣ್ಣುಮಕ್ಕಳದೇ ಆಗಿರುತ್ತದೆ. ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಪ್ರತ್ಯೇಕ ಕಾಲೇಜು ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದರು.
 ಹೆಣ್ಣು ಮಕ್ಕಳು ದೃಢ ನಿರ್ಧಾರದಿಂದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಪ್ರಾಮಾಣಿಕತೆಯನ್ನು ರೂಡಿಸಿಕೊಂಡು ದೃಢ ಸಂಕಲ್ಪದ ಮೂಲಕ ಹೆಚ್ಚಿನ ಉದ್ಯೋಗಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಧಿಸಬೇಕು ಎಂದು ಅವರು ಹೇಳಿದರು.
ಬಸವಣ್ಣವರು ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಅರಿತುಕೊಳ್ಳಬೇಕು. ಅವರು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆಯನ್ನು ತೋರಿಸಿಕೊಟ್ಟವರು. ಹಾಗೆ ಬದುಕಲು ದಾರಿ ಕಲ್ಪಿಸಿದವರು. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಗೌರವವನ್ನು ಹೆಚ್ಚಿಸಿದ್ದಾರೆ. ಈಗಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಅಂಬೇಡ್ಕರ್ ಅವರು ನೀಡಿದ ಸಂವಿಧಾನವಾಗಿದೆ. ಹೆಣ್ಣು ಮಕ್ಕಳು ಅಂಬೇಡ್ಕರ್ ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸಚಿವರು ತಿಳಿಸಿದರು.
ಈಗಿನ ಪೀಳಿಗೆಯವರ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಸಮಾಜವನ್ನು ಕಟ್ಟುವ ನಿರ್ಧಾರವನ್ನು ಮಾಡಿ, ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಎಸ್. ಲಾಡ್ ಅವರು ವಿದ್ಯಾರ್ಥಿಗಳಿಗೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ ಬೆಲ್ಲದ ಅವರು ಮಾತನಾಡಿ, ಮಹಿಳಾ ಕಾಲೇಜು ಉತ್ತಮ ಸ್ಥಳದಲ್ಲಿ ಆರಂಭವಾಗಿದೆ. ಸಾರ್ವಜನಿಕರ ಸ್ಪಂದನೆ ಚನ್ನಾಗಿದೆ. ದಿನದಿಂದ ದಿನಕ್ಕೆ ಮಹಿಳಾ ಕಾಲೇಜು ಬೆಳೆಯುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಉನ್ನತ ಶಿಕ್ಷಣ ಸಚಿವರ ಸಹಕಾರ ಮತ್ತು ಕಾಳಜಿಯಿಂದ ಇಂದು ಕಾಲೇಜು ನೂತನ ಕಟ್ಟಡ ಕಾಮಗಾರಿ ಆರಂಭವಾಗಿದೆ. ತಮ್ಮ ಅನುದಾನದಲ್ಲಿ ಹಳೆಯ ಕಟ್ಟಡಕ್ಕೆ ತಾತ್ಕಾಲಿಕ ಹೊದಿಕೆ ಮಾಡಲಾಗಿದೆ. ನಿರಂತರ ಪ್ರಯತ್ನದ ಫಲವಾಗಿ ಇಂದು ನೂತನ ಕಟ್ಟಡದ ಕನಸು ನನಸಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಕಳೆದ ವರ್ಷದಲ್ಲಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳಿಂದ ದೂರು ಬಂದಿತ್ತು. ಮಹಿಳಾ ಕಾಲೇಜಿನ ತರಗತಿಯ ಕೊಠಡಿಗಳು ಸೋರುತಿವೆ, ಮಕ್ಕಳಿಗೆ ಕುಳಿತುಕೊಳ್ಳಲು ಜಾಗವಿಲ್ಲದ ಪರಿಸ್ಥಿತಿಯು ಬಂದಿದೆ ಎಂದಾಗ ತಕ್ಷಣ ಕ್ರಮವಹಿಸಿ, ಪರ್ಯಾಯ ವ್ಯವಸ್ಥೆ ಮಾಡಲಾಯಿತು.
ಧಾರವಾಡದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ   ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಸಚಿವರು ಅಭಯ ನೀಡಿ, ಆರ್ಥಿಕ ಅನುಮೋದನೆ ಕೊಡಿಸಿದರು. ಅದೇ ರೀತಿಯಲ್ಲಿ ಈ ವರ್ಷ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ದಿನಮಾನಗಳಲ್ಲಿ ಹೆಣ್ಣು ಮಕ್ಕಳು ಸಾಧಕೀಯರಾಗಬೇಕು. ಈಗಿನ ದಿನಗಳಲ್ಲಿ ಹೆಣ್ಣು ಮಕ್ಕಳು ಪದವಿಯನ್ನು ಪಡೆದುಕೊಂಡು, ವಿದ್ಯಾವಂತರಾಗಿ ಸಮಾಜಕ್ಕೆ ಒಳಿತನ್ನು ಬಯಸಿ, ಉನ್ನತ ಸ್ಥಾನದಲ್ಲಿ ಕೆಲಸ ನಿರ್ವಹಸಿಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಕಾಲೇಜು ಪ್ರಾಂಶುಪಾಲ ಡಾ.ಎಸ್.ಎಸ್.ಅಂಗಡಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪೊಲೀಸ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಮಹಾನಗರ ಪಾಲಿಕೆ ಸದಸ್ಯರಾದ ಸುರೇಶ ಬೆದ್ರೆ, ಡಾ.ಮಯೂರ ಮೋರೆ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ ಹೊಸಮನಿ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜು ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article