ಬಳ್ಳಾರಿ..12. ., ಸಾವಿತ್ರಿಬಾಯಿ ಫುಲೆ ಜಯಂತಿಯ ಅಂಗವಾಗಿ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆ, ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಿ. ಉಷಾರಾಣಿ ಅವರಿಗೆ ಅತ್ಯುತ್ತಮ ಶಿಕ್ಷಕಿ (ಶಿಕ್ಷಣ ವಿದ್ಯಾರತ್ನ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಇತ್ತೀಚೆಗೆ ವಿಜಯವಾಡದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಹಿಳಾ ಶಿಕ್ಷಣದ ಪಿತಾಮಹಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಗೌರವಾರ್ಥವಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಈ ಗೌರವ ನೀಡಲಾಯಿತು. ಈ ವೇಳೆ ಮಾತನಾಡಿದ ಬಿ.ಸಿ.ವೈ ಪಾರ್ಟಿಯ ನಾಯಕ ರಾಮಚಂದ್ರ ಯಾದವ್, ವಿದ್ಯಾರ್ಥಿಗಳಲ್ಲಿ ಮೌಲ್ಯ, ನೈತಿಕತೆ ಮತ್ತು ಸಮಾನತೆಯ ಭಾವನೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದೆಯೆಂದು ಹೇಳಿದರು. ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಅವರು ಮಾಡಿದ ಸೇವೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದರು.
ಕೋವಿಡ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ತಟ್ಟೆಗಳು, ಕ್ರೀಡಾ ಕಿಟ್ಗಳು ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ ಎಂದು ಶಿಕ್ಷಕಿ ಉಷಾರಾಣಿ ತಿಳಿಸಿದರು. ಈ ಗೌರವವು ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಮಾಂಜನೇಯುಲು ಯಾದವ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ರಾಮ, ಕಾರ್ಯದರ್ಶಿ ಡಾ. ಶೈಲಜಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.


