ಇ.ಡಿ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಕೆಡಿಸಲು ಹನ್ನಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Ravi Talawar
ಇ.ಡಿ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಕೆಡಿಸಲು ಹನ್ನಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
WhatsApp Group Join Now
Telegram Group Join Now
ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ  ಹೆಸರೇಳುವಂತೆ ನಿಗಮದ ಹಿಂದಿನ ಎಂಡಿ  ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ ಆಧಿಕಾರಿಗಳ ವರ್ತನೆ ವಿರೋಧಿಸಿ, ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಮಂಗಳವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಇ.ಡಿಯನ್ನ ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮ ಸರ್ಕಾರವನ್ನ ಅಸ್ಥಿರ ಗೊಳಿಸುವುದೇ ಕೇಂದ್ರ ಸರ್ಕಾರದ ಮೂಲ ಉದ್ದೇಶ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ನ್ಯಾಷನಲ್ ಬ್ಯಾಂಕ್ ಗಳ ಪಾತ್ರ ಕಂಡು ಬಂದಿದೆ. ಹಾಗಿದ್ದರೆ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ರಾಜೀನಾಮೆ ನೀಡಲಿ. ನಾವು ಯಾವ ತನಿಖೆಗೂ ಹೆದರಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
 ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್ ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
ನಾವು ಸದನದ ಹೊರಗೆ ಒಳಗೆ ಹೋರಾಡುತ್ತೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆ ಗಳಿಗೆ ಅಂಜುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
WhatsApp Group Join Now
Telegram Group Join Now
Share This Article