ಆಹ್ವಾನ ಪತ್ರಿಕೆ ಉರ್ದು ಭಾಷೆಯಲ್ಲಿ ಮುದ್ರಿಸಿರುವುದನ್ನು ಖಂಡಿಸಿ ಕರವೇಯಿಂದ ಬೃಹತ್ ಪ್ರತಿಭಟನೆ

Sandeep Malannavar
ಆಹ್ವಾನ ಪತ್ರಿಕೆ ಉರ್ದು ಭಾಷೆಯಲ್ಲಿ ಮುದ್ರಿಸಿರುವುದನ್ನು ಖಂಡಿಸಿ ಕರವೇಯಿಂದ ಬೃಹತ್ ಪ್ರತಿಭಟನೆ
WhatsApp Group Join Now
Telegram Group Join Now
ಬಳ್ಳಾರಿ, ಮಾ.03.: ಆರೋಗ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಉರ್ದು ಭಾಷೆಯನ್ನು ಬಳಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ಅಖಂಡ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷ ರಾಜಶೇಖರ್ (ಕುರಟ್ಟಿ ರಾಜಣ್ಣ)ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನಾಕಾರರು ನಗರದ ರಾಯಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮುಖ್ಯಮಂತ್ರಿಗಳಿಗೆ ಕಳುಹಿಸಲಾದ ಮನವಿ ಪತ್ರದಲ್ಲಿ, ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡವಾಗಿದ್ದು, ಆರೋಗ್ಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಂಪೂರ್ಣವಾಗಿ ಉರ್ದು ಭಾಷೆಯಲ್ಲಿ ಮುದ್ರಿಸಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧ್ಯಕ್ಷ ರಾಜಶೇಖರ್ (ರಾಜಣ್ಣ) ಮಾತನಾಡಿ, ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯಾಗಿ ಕಡ್ಡಾಯಗೊಳಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾದರೂ, ಕೆಲ ಅಧಿಕಾರಿಗಳು ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯ ಎಂದರು. ಕನ್ನಡ ನಾಡು-ನುಡಿಯ ಗೌರವ ಕಾಪಾಡುವ ನಿಟ್ಟಿನಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರ ನಡೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗುರುರಾಜ್, ಕಟಿಗಿ ಸೂರಿ, ಸೂರ್ಯನಾರಾಯಣ, ಮೃತ್ಯುಂಜಯ, ಲಕ್ಷ್ಮಣ, ನೂರ್ ಭಾಷಾ, ರವಿ, ಡೇವಿಡ್, ಕುಡುತೀನಿ ಶಿವು, ಶ್ರೀಶೈಲ, ಮಲ್ಲಯ್ಯ, ಮಹೇಶ್, ರಾಮು, ದ್ವಾರಕೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article