ಬಳ್ಳಾರಿ. ಎ. 09: ನಗರದ ಕೇಂದ್ರ ಕಾರಾಗೃಹದಲ್ಲಿ ನೀಡಲಾಗುತ್ತಿದ್ದ ಆಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಕೈದಿಗಳು ಮತ್ತು ಜೈಲು ಸಿಬ್ಬಂದಿಯ ನಡುವೆ ಸಣ್ಣ ಗಲಾಟೆ ಉಂಟಾದ್ದರಿಂದ ಜೈಲಿನಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ.
ಮೂಲಗಳ ಪ್ರಕಾರ, ಕಳೆದ ಒಂದು ವಾರದಿಂದ ಜೈಲು ಎಸ್ಪಿ ಗೈರುಹಾಜರಿದ್ದ ಕಾರಣ ಆಡಳಿತದಲ್ಲಿ ಕೆಲವು ವ್ಯತ್ಯಾಸಗಳು ಉಂಟಾಗಿ ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಈ ಮಾಹಿತಿ ತಿಳಿದ ತಕ್ಷಣ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸುಮನ್ ಡಿ. ಪನ್ನೇಕರ್ ಅವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತಕ್ಷಣವೇ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕರೆಸಿಕೊಂಡು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ಘಟನೆಯ ವೇಳೆ ಅಶೋಕ್ ಹೊಸಮನೆ ಎಂಬ ಸಿಬ್ಬಂದಿಗೆ ಕುತ್ತಿಗೆಯ ಭಾಗದಲ್ಲಿ ಸಣ್ಣ ಪ್ರಮಾಣದ ಗಾಯವಾಗಿರುವುದಾಗಿ ತಿಳಿದುಬಂದಿದೆ. ಆದರೆ, ಇತರ ಯಾವುದೇ ಗಂಭೀರ ಗಾಯಾಳುಗಳ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಆಂಬುಲೆನ್ಸ್ ವ್ಯವಸ್ಥೆಯನ್ನೂ ಸಜ್ಜುಗೊಳಿಸಲಾಗಿತ್ತು. ಕಾರಾಗೃಹ ಇಲಾಖೆ ತಕ್ಷಣ ಗೇಟ್ಗಳನ್ನು ಲಾಕ್ ಮಾಡಿ ಒಳಾಂಗಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು.
ಇದಲ್ಲದೆ, ಘಟನೆ ಸಂಬಂಧಿಸಿದಂತೆ ನಂತರ ಎಫ್ಐಆರ್ ದಾಖಲು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಪಡೆ ಆಗಮಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದು, ಈಗ ಎಲ್ಲವೂ ನಿಯಂತ್ರಣದಲ್ಲಿದೆ.
ಒಟ್ಟಾರೆ, ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸುಮನ್ ಡಿ ಪನ್ನೇಕರ್ ಪೊಲೀಸರು ಮತ್ತು ಕಾರಾಗೃಹ ಇಲಾಖೆ ತ್ವರಿತ ಕ್ರಮ ಕೈಗೊಂಡ ಪರಿಣಾಮ ಯಾವುದೇ ದೊಡ್ಡ ಅನಾಹುತ ತಪ್ಪಿದಂತಾಗಿದೆ.


