ಬೆಂಗಳೂರು, ಸೆಪ್ಟೆಂಬರ್ 25: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.
ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ

ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

