ಕೋಲ್ಕತ್ತಾ, ಮೇ 19: ಪಾಕಿಸ್ತಾನದೊಳಗಿನ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸಿದ ಪ್ರಬಲ ದಾಳಿಯ ನಂತರ, ಭಾರತ ಸರ್ಕಾರ ಭಯೋತ್ಪಾದನೆಯ ವಿರುದ್ಧ ತನ್ನ ಅಚಲ ನಿಲುವನ್ನು ಜಗತ್ತಿಗೆ ತಿಳಿಸುವ ಕಾರ್ಯವನ್ನು ಪ್ರಾರಂಭಿಸಿದೆ. ಪಾಕಿಸ್ತಾನ ಏನೆಂಬುದನ್ನು ಜಗತ್ತಿಗೆ ಅರ್ಥ ಮಾಡಿಸಿ ಎಲ್ಲರ ಮುಂದೆ ಅದರ ಮುಖವಾಡ ಕಳಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಮ್ಮ ಟಿಎಂಸಿ ಸಂಸದರನ್ನು ನಾವು ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.
ಕೇವಲ ಎನ್ಡಿಎ ಮಾತ್ರವಲ್ಲ ಎಲ್ಲಾ ಪಕ್ಷಗಳ ಸಂಸದರ ನಿಯೋಗವನ್ನು ಮಾಡಿದ್ದು, ಅವರು ವಿಶ್ವದೆಲ್ಲೆಡೆ ಸಂಚರಿಸಿ ಪಾಕ್ ಕಳ್ಳಾಟಗಳ ಕುರಿತು ಮಾಹಿತಿ ನೀಡಲಿದ್ದಾರೆ. ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಕೈಗೊಂಡ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಗ್ಗೆ ಹಾಗೂ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ಥಾನದ ಕಪಟ ಮುಖವನ್ನು ಜಗತ್ತಿಗೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಸರ್ವ ಪಕ್ಷಗಳ ನಿಯೋಗವನ್ನು ಪ್ರಮುಖ ರಾಷ್ಟ್ರಗಳಿಗೆ ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪಾಕ್ ವಿರುದ್ಧ ದ್ವಿತೀಯ ಹಂತದ ರಾಜತಾಂತ್ರಿಕ ಯುದ್ಧವನ್ನು ನಡೆಸಲಿದೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಕೇಂದ್ರ ಸಚಿವ ಕಿರಣ್ ರಿಜಿಜು ಮಾತುಕತೆ ನಡೆಸಿದ್ದು, ಕಾಂಗ್ರೆಸ್ ಇದರಲ್ಲಿ ಭಾಗಿಯಾಗುವುದಾಗಿ ತಿಳಿಸಿದೆ. ರಾಜತಾಂತ್ರಿಕ ಪ್ರಯತ್ನಕ್ಕೆ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ತಮ್ಮ ಸಂಸದರನ್ನು ಕಳುಹಿಸಲು ಒಪ್ಪಿಗೆ ಸೂಚಿಸಿವೆ.