ಬಳ್ಳಾರಿ: (ಡಿ.13)), ಈಗಿನ ಯುವ ಸಮುದಾಯ ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಇದಕ್ಕೆ ಪೋಷಕರು ಕೂಡ ಪ್ರೋತ್ಸಾಹಿಸಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಲ್ಲೇಶ್ವರಂ, ಬೆಂಗಳೂರು ಮತ್ತು ಬಳ್ಳಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ 2025-26 ರ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿಗಳಿಗೆ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು
ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿಗಳು ನಮ್ಮ ಜಿಲ್ಲೆಯಲ್ಲಿ ಆಯೋಜಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು-ಗೆಲುವು ಮುಖ್ಯವಲ್ಲ ಎಂದು ತಿಳಿಸಿದರು.
ನಾನು ಸಹ ನನ್ನ ಜೀವನದಲ್ಲಿ ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದೇನೆ ಎಂದು ತಮ್ಮ ಜೀವನದ ಕ್ಷಣಗಳನ್ನು ಮೆಲುಕು ಹಾಕಿದರು.
ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಲಕ್ಷö್ಮಣ.ಆರ್.ಹಳ್ಳದಮನಿ ಅವರು ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ 21 ಬಾಲಕರ ತಂಡ, 19 ಬಾಲಕಿಯರ ತಂಡ ಭಾಗವಹಿಸಿದ್ದು, ಅಂತಿಮ ಪಂದ್ಯದಲ್ಲಿ ವಿಜೇತರಾದವರು ರಾಜ್ಯವನ್ನು ಪ್ರತಿನಿಧಿಸುವ ತಂಡವಾಗಿ ಹೊರಹೊಮ್ಮುತ್ತಿರಿ. ಅಲ್ಲಿ ನಮ್ಮ ರಾಜ್ಯಮಟ್ಟದ ಪ್ರತಿಭೆಯನ್ನು ಪ್ರತಿಬಿಂಬಿಸಬೇಕು. ನಮ್ಮ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಕ್ರೀಡಾಪಟುಗಳನ್ನು ಆಶಿಸಿದರು.
ಈ ಸಂದರ್ಭದಲ್ಲಿ ಗಣ್ಯರು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳ ತಂಡದ ಮುಖ್ಯಸ್ಥರನ್ನು ಪರಿಚಯ ಮಾಡಿಕೊಂಡರು. ಬಳಿಕ ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿಗಳು ಡಿ.14 ರವರೆಗೆ ನಡೆಯಲಿವೆ. ಅಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ವೇಳೆ ಬಳ್ಳಾರಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹೆಚ್.ಎಸ್ ಶಿವರಾಮ್, ಉಪಧ್ಯಾಕ್ಷರಾದ ಬಿ.ಸುಲೇಖ, ಸೇಂಟ್ ಜಾನ್ಸ್ ಸಂಸ್ಥೆಗಳ ಆಡಳಿತ ಮಂಡಳಿಯ ಫಾ.ಫ್ರಾನ್ಸಿಸ್, ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಾಗರಾಜ್ ಹವಾಲ್ದಾರ್, ಕಾರ್ಯಾಧ್ಯಕ್ಷ ಎಂ. ಶ್ರೀಶೈಲ, ಕಾರ್ಯದರ್ಶಿ ಪಿ.ನಾಗೇಶ್ವರ ರಾವ್, ಜಿಲ್ಲಾ ಉಪನ್ಯಾಸಕರ ಸಂಘ ಅಧ್ಯಕ್ಷ ಎಂ.ರಾಜಣ್ಣ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಅಧ್ಯಕ್ಷ ಟಿ.ಆರ್ ಬಸವರಾಜು, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸಿ.ಕೋಟ್ರೇಶ್, ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ತಿರುಪತಿ ನಾಯಕ, ರಾಜ್ಯ ಮಟ್ಟ ಹಾಕಿ ಪಂದ್ಯಾವಳಿ ಸಂಘಟನಾ ಕಾರ್ಯದರ್ಶಿ ಹಾಗೂ ಬಳ್ಳಾರಿ ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಎಸ್.ಶಿವರಾಮ್ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ವರ್ಗ, ಸ್ವಯಂ-ಸೇವಕರು, ಪೋಷಕರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.


