ನಗರೋತ್ಥಾನ ಹಂತ-4 ರ ಬಾಕಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ: ಸಚಿವ ರಹೀಂ ಖಾನ್ ಸೂಚನೆ

Ravi Talawar
ನಗರೋತ್ಥಾನ ಹಂತ-4 ರ ಬಾಕಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ: ಸಚಿವ ರಹೀಂ ಖಾನ್ ಸೂಚನೆ
WhatsApp Group Join Now
Telegram Group Join Now
ಬಳ್ಳಾರಿ,ಆ.15 ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಹಂತ-4 ರಲ್ಲಿ ಕೈಗೊಂಡಿರುವ ವಿವಿಧ ಬಾಕಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಗೆ ನಗರೋತ್ಥಾನ ಯೋಜನೆಯಡಿ 4ನೇ ಹಂತದಲ್ಲಿ ವಿವಿಧ ಕಾಮಗಾರಿಗಳಿಗೆ 68 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 31 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನೂ ಪೂರ್ಣಗೊಳ್ಳದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಈ ಕುರಿತು ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.
ನಗರೋತ್ಥಾನ ಹಂತ-4 ರಲ್ಲಿ ಮಂಜೂರಾದ 104 ಕಾಮಗಾರಿಗಳಲ್ಲಿ 38 ಕಾಮಗಾರಿಗಳು ಪೂರ್ಣಗೊಂಡಿದ್ದು, 45 ಕಾಮಗಾರಿಗಳು ಪ್ರಗತಿಯಲ್ಲಿವೆ. ಅದರಲ್ಲಿ 32 ವೈಯಕ್ತಿಕ ಕಾಮಗಾರಿಗಳಿಗೆ ಹಾಗೂ 02 ವಂತಿಕೆ ಕಾಮಗಾರಿಗಳಿಗೆ ಹಣ ಬಿಡುಗಡೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಪ್ರಾರಂಭಿಸಬೇಕಾದ 22 ಕಾಮಗಾರಿಗಳಲ್ಲಿ 04 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಅಬ್ದುಲ್ ರೆಹಮಾನ್ ಅವರು ಸಭೆಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಹೀಂ ಖಾನ್ ಅವರು, ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದಾಗ ಮುಖ್ಯಮಂತ್ರಿಯವರು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅನುದಾನ ಬಿಡುಗಡೆಗಾಗಿ ಗುತ್ತಿಗೆದಾರರನ್ನು ಕಚೇರಿಗೆ ಅಲೆದಾಡಿಸುವಂತಿಲ್ಲ. ಸಂಬAಧಿಸಿದ ಇಂಜಿನಿಯರ್ ಗಳ ಸಭೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿನ ವಿವಿಧ ಆಸ್ತಿ, ನೀರಿನ ಶುಲ್ಕ ಮತ್ತು ಅಂಗಡಿ ಶುಲ್ಕ, ಟ್ರೇಡ್ ಲೈಸೆನ್ಸ್ ಗಳ ತೆರಿಗೆ ಹಣವನ್ನು ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ವಸೂಲಿ ಮಾಡಿ ಶೇಕಡವಾರು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಗ್ರಾಪಂ ವ್ಯಾಪ್ತಿಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗಿದೆ. ನೀರು ಸರಬರಾಜು ಪೈಪ್ ಲೈನ್ ಗಳಲ್ಲಿ ಚರಂಡಿ ನೀರು ಸೇರಿದಂತೆ ಯಾವುದೇ ಕಲುಷಿತ ನೀರು ಸೇರದಂತೆ ಜಾಗ್ರತೆ ವಹಿಸಲಾಗಿದೆ. ಓವರ್ ಹೆಡ್ ಟ್ಯಾಂಕ್ ಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತೆ, ಬಳಿಕ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಕುಡಿಯಲು ಸರಬರಾಜು ಮಾಡಲಾಗುತ್ತಿದೆ ಮತ್ತು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಸಭೆಗೆ ತಿಳಿಸಿದರು.
ಈ ಭಾಗದಲ್ಲಿ ಕುಡಿಯುವ ನೀರಿಗೆ ತುಂಗಭದ್ರಾ ಜಲಾಶಯ ಅವಲಂಬಿತವಾಗಿದ್ದು, ಕಾಲುವೆಗಳ ಮುಖಾಂತರ ನೀರು ಶುದ್ದೀಕರಿಸಿ ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿವೇಶನ ಕಲ್ಪಿಸಲು ಪೌರಕಾರ್ಮಿಕ ಫಲಾನುಭವಿಗಳಿಗೆ ಜಾಗ ಗುರುತಿಸಿರುವ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನನಗೆ ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ಬಡ ಜನರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರ್ಕಾರ ನಿಗದಿಪಡಿಸಿರುವ ಗುಣಮಟ್ಟದಲ್ಲಿ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಇ-ಖಾತಾ ವಿತರಣೆ ಸಂಬAಧಿಸಿದAತೆ, ಪ್ರಗತಿ ಸಾಧಿಸಬೇಕು. ಖಾತಾ ವಿತರಣೆಯಲ್ಲಿ ಯಾವುದೇ ಗೊಂದಲ ಮತ್ತು ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದರೆ ಚರ್ಚಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರಲ್ಲದೇ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯು ಅಗತ್ಯವಾಗಿದ್ದು, ಸಂಬAಧಿಸಿದ ಅಧಿಕಾರಿಗಳು ನಿರ್ವಹಣೆ ಕುರಿತು ಭೇಟಿ ನಡೆಸಬೇಕು ಎಂದರು.
ಸಭೆಯಲ್ಲಿ 24*7 ಕುಡಿಯುವ ನೀರು ಸರಬರಾಜು, ಯುಜಿಡಿ ಸೇರಿದಂತೆ ವಿವಿಧ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ವರದಿಗಳ ಕುರಿತು ಮಾಹಿತಿ ಪಡೆದ ಸಚಿವರು ಹಲವು ಸಲಹೆ-ಸೂಚನೆ ಅಧಿಕಾರಿಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಚಿವರ ಆಪ್ತ ಕಾರ್ಯದರ್ಶಿ ಮುರಳಿಧರ್ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಎಂಜಿನಿಯರ್ ಗಳು ಹಾಗೂ ಇತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article