ಬಳ್ಳಾರಿ ಏ 10. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಮತ್ತು ಮುಖ್ಯಮಂತ್ರಿಗಳ ವಿಶೇಷ ಅನುದಾನ ಸೇರಿ ಒಟ್ಟು ೨೦೦ ಕೋಟಿ ರೂ.ಗಳ ಅನುದಾನದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮೊದಲನೇ ಹಂತದಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ೮೦ ಕೋಟಿ ರೂ.ಗಳ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ, ಟೆಂಡರ್ ಕಾರ್ಯ ಪೂರ್ಣಗೊಂಡ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.
ಅದೇ ರೀತಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ನಗರ ವಿಧಾನಸಭಾ ಕ್ಷೇತ್ರದ ಆಯಾ ವಾರ್ಡಗಳ ಅವಶ್ಯಕತೆಗೆ ತಕ್ಕಂತೆ ೩ ರಿಂದ ೫ ಕೋಟಿವರೆಗೆ ಅನುದಾನ ಮೀಸಲಿರಿಸಲಾಗಿದ್ದು, ಈ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಹೇಳಿದರು.ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿ ಶಾಶ್ವತ ಪರಿಹಾರ ಒದಗಿಸುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
’ಸಲಾಂ ಬಳ್ಳಾರಿ ಅಭಿಯಾನ’ದ ಭಾಗವಾಗಿ ಈಗಾಗಲೇ ಭೇಟಿ ನೀಡಲಾಗಿರುವ ವಾರ್ಡಗಳ ಪೈಕಿ ಬಹುತೇಕ ಎಲ್ಲ ವಾರ್ಡಗಳಲ್ಲಿ ಒಂದೇ ರೀತಿಯ ಸಮಸ್ಯೆಗಳು ಇವೆ, ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡ ಭಂಭಂ ದಾದಾ, ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಶಮೀಮ್ ಜೊಹ್ರಾ, ರಜಾಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಸೇನ್ ಪೀರಾಂ, ಸಾದಿಕ್, ನೂರ್, ಅನ್ಸರ್, ಎಂ.ಸುಬ್ಬರಾಯುಡು, ಅಬ್ದುಲ್ ಬಾರಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.