ಮಂಗಳೂರು, ಏಪ್ರಿಲ್ 30: ಬಡವರು ಮೂರು ಹೊತ್ತು ಉಪವಾಸ ಕೂರಬಾರದೆಂದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ ಈ ಯೋಜನೆ ಮೂಲಕ ಸಿಗುವ ಅಕ್ಕಿ ಅನ್ಯರ ಪಾಲಾಗುತ್ತಿದೆ. ಇದಕ್ಕೆ ಸಾಕ್ಷಿಯೆನ್ನುವಂತೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.
ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಮಾಡಿದ ಅಧಿಕಾರಿಗಳು ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಅನಿತಾ ಮಾಹಿತಿ ನೀಡಿದ್ದಾರೆ.
ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟ ಮಾಫಿಯಾ ಸಕ್ರಿಯವಾಗಿರುವ ಅನುಮಾನವಿದೆ. ದಲ್ಲಾಲಿಗಳ ಮೂಲಕ ಅಕ್ರಮವಾಗಿ ಅಕ್ಕಿ ಖರೀದಿಸಿ ಮಂಗಳೂರಿನ ಕೆಲ ಖಾಸಗಿ ರೈಸ್ ಮಿಲ್ಗಳಿಗೆ ಸಾಗಾಟ ಮಾಡುತ್ತಿರುವ ಶಂಕೆಯಿದೆ. ಬಳಿಕ ಫಾಲಿಶ್ ಮಾಡಿ ಬೇರೆ ಬೇರೆ ಬ್ರ್ಯಾಂಡ್ ಹೆಸರಿನಲ್ಲಿ ಮಾರುಕಟ್ಟೆಗೆ ಪೂರೈಕೆ ಮಾಡುವ ಮಾಫಿಯಾ ಕಾರ್ಯಚರಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಹೀಗಾಗಿ ಗೋಡೌನ್ನಲ್ಲಿದ್ದ ವಿವಿಧ ಅಕ್ಕಿಗಳ ಮಾದರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಇನ್ನು ಗೋಡೌನ್ನಲ್ಲಿ ಲೇಬಲ್ ಇಲ್ಲದ 500 ಕ್ವಿಂಟಾಲ್ ಗೂ ಹೆಚ್ಚು ಅಕ್ಕಿ ದಾಸ್ತಾನು ಇರಿಸಿರುವುದು ಕಂಡು ಬಂದಿದ್ದು ಇದು ಅನುಮಾನಕ್ಕೆ ಕಾರಣವಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.