ಬಳ್ಳಾರಿ,ಆ.29 ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದು, ಸಮಾಜದ ಸರ್ವತೋಮುಖ ಪ್ರಗತಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದೇ ಜಾತಿ, ಒಂದೇ ಧರ್ಮ, ಒಂದೇ ಜನಾಂಗ ಎಂಬ ಸಂದೇಶ ಸಾರಿದ ಗುರುಗಳು ಅಸ್ಪೃಶ್ಯತೆ ನಿರ್ಮೂಲನೆಗಾಗಿ ನಿರಂತರವಾಗಿ ಶ್ರಮಿಸಿದರು ಎಂದು ಸ್ಮರಿಸಿದರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ಮಾತನಾಡಿ, ಇಂದಿನ ಯುವ ಪೀಳಿಗೆಗೆ ಮಹನೀಯರ ಆದರ್ಶ ಹಾಗೂ ಕೊಡುಗೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪೂರಕ ಸಾಹಿತ್ಯ ಪುಸ್ತಕಗಳ ರಚನೆಯಾಗಬೇಕಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, ಅಸ್ಪೃಶ್ಯತೆ ವಿರುದ್ಧ ಹೋರಾಡಿ ‘ಕೇರಳದ ಬಸವಣ್ಣ’ ಎಂದೇ ಪ್ರಸಿದ್ಧರಾದ ನಾರಾಯಣ ಗುರುಗಳು, 1888ರಲ್ಲಿ ಅರುವಿಪುರಂನಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿ ಎಲ್ಲ ಸಮುದಾಯಗಳಿಗೂ ಮುಕ್ತ ಪ್ರವೇಶ ಕಲ್ಪಿಸುವ ಮೂಲಕ ಐತಿಹಾಸಿಕ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಆಗಸ್ಟ್ 28, 1856ರಂದು ಕೇರಳದ ಚೆಂಪಜAತಿಯಲ್ಲಿ ಜನಿಸಿದ ನಾರಾಯಣ ಗುರುಗಳು, ಸಂಸ್ಕೃತ-ಧರ್ಮಗ್ರAಥಗಳ ಅಧ್ಯಯನ ನಡೆಸಿ 1903ರಲ್ಲಿ ‘ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ’ ಸಂಸ್ಥೆಯನ್ನು ಸ್ಥಾಪಿಸಿ ಶೈಕ್ಷಣಿಕ, ಸಾಮಾಜಿಕ ಸುಧಾರಣೆಗೆ ಬಲ ನೀಡಿದರು ಎಂದು ತಿಳಿಸಿದರು.
*ಭವ್ಯ ಮೆರವಣಿಗೆ:*
ಜಯಂತಿಯ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯವಾದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕುಂಭ ಹೊತ್ತ ಹೆಣ್ಣು ಮಕ್ಕಳು ಗಮನ ಸೆಳೆದರು. ಮೆರವಣಿಗೆಯು ನಗರದ ಈಡಿಗ ಹಾಸ್ಟೆಲ್ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಮತ್ತು ಹೆಚ್.ಆರ್. ಗವಿಯಪ್ಪ ವೃತ್ತದ ಮಾರ್ಗವಾಗಿ ಸಾಗಿ ಡಾ.ಜೋಳದರಾಶಿ ರಂಗಮAದಿರ ತಲುಪಿತು.
ಕಾರ್ಯಕ್ರಮದಲ್ಲಿ ರಕುಮಾ ಎಲ್. ತಂಡದಿAದ ಭಕ್ತಿ ಸಂಗೀತ ನೆರವೇರಿತು. ಇದಕ್ಕೂ ಮುನ್ನ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಈಡಿಗ ಸಮಾಜದ ಕಾರ್ಯದರ್ಶಿ ಪಿ. ಮಂಜುನಾಥ್, ನಿವೃತ್ತ ಅಧಿಕಾರಿ ಮಲ್ಲಿಕಾರ್ಜುನ್ ಸೇರಿದಂತೆ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.