ರನ್ನ ಬೆಳಗಲಿ, ಆ.೨೯: ವಿದ್ಯಾರ್ಥಿಗಳು ಹಾಗೂ ಯುವಜನರು ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ, ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಬೆಳಗಲಿ ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಕೆ.ಎ. ಧಡೂತಿ ಹೇಳಿದರು.
ಪಟ್ಟಣದ ಬೆಳಗಲಿ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಮುಧೋಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ, ಬಾಗಲಕೋಟೆ ಹಾಗೂ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗ ಶಿಕ್ಷಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ನೀಲಣ್ಣವರ ಮಾತನಾಡಿ, ಡ್ರಗ್ಸ್, ಮದ್ಯ, ತಂಬಾಕು ಸೇರಿದಂತೆ ವಿವಿಧ ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ, ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಜೀವನದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದರು.ಶಾಲಾ ಮಕ್ಕಳು, ಯುವಕರು, ವಿದ್ಯಾವಂತರು, ಸಾಧಕರು ಹಾಗೂ ಮಹಿಳೆಯರೂ ವಿವಿಧ ರೀತಿಯ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವಸ್ತುಗಳಿಗೆ ಆಕರ್ಷಿತರಾಗುವುದು ಇಂದಿನ ಸಮಾಜ ಎದುರಿಸುತ್ತಿರುವ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ ಹಾಗೂ ಸಕಾರಾತ್ಮಕ ಚಿಂತನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರತಿನಿತ್ಯ ಯೋಗಾಭ್ಯಾಸಕ್ಕೆ ಸಮಯ ಮೀಸಲಿಟ್ಟು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ವಲಯ ಮೇಲ್ವಿಚಾರಕಿ ಚಂದ್ರಕಲಾ ರೇಶ್ಮಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಯುತ್ತಿರುವ ವಿವಿಧ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಿಕ್ಷಕರಾದ ಎ. ಎಂ ಕಂಬಾರ, ವಿನಾಯಕ ಬಕರೆ, ಎಸ್.ಬಿ. ರಡರಟ್ಟಿ, ಸೇವಾ ಪ್ರತಿನಿಧಿಗಳಾದ ಸಾವಿತ್ರಿ ಜೈನಾಪುರ, ಸುಧಾ ಜೈನಾಪುರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.