ಬಳ್ಳಾರಿ, ಜು. 03: ನಗರದ ವಾರ್ಡ್ ಸಂಖ್ಯೆ 33ರ ವಿನಾಯಕ ನಗರದಲ್ಲಿ ₹1.50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಪಾಲಿಕೆ ಸದಸ್ಯೆ ಜಾನಕಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (MGNVY-2) 2024-25ರಡಿ ಪ್ಯಾಕೇಜ್-6, ಉಪ ಅಂದಾಜು-4ರಡಿ ಕೈಗೆತ್ತಿಕೊಳ್ಳಲಾಗಿರುವ ಈ ಯೋಜನೆಯಡಿ ವಿನಾಯಕ ನಗರದ ಡಬ್ಲ್ಯುಟಿಪಿಯಿಂದ ರೈಲ್ವೆ ಟ್ರ್ಯಾಕ್ ರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಕಾಮಗಾರಿಗೆ ₹1.50 ಕೋಟಿ (150 ಲಕ್ಷ ರೂ.) ವೆಚ್ಚ ನಿಗದಿಪಡಿಸಲಾಗಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯೆ ಜಾನಕಿ, ಸಾರ್ವಜನಿಕರಿಗೆ ಗುಣಮಟ್ಟದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಆದ್ಯತೆಯಾಗಿದ್ದು, ರಸ್ತೆ, ಕುಡಿಯುವ ನೀರು, ಒಳಚರಂಡಿ ಹಾಗೂ ಬೀದಿ ದೀಪ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುತ್ತಿದೆ ಎಂದರು. ವಾರ್ಡ್ 33ರ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ತಿಳಿಸಿದ ಅವರು, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಯೋಜನೆಯ ಇಂಜಿನಿಯರಿಂಗ್ ಸಲಹೆಗಾರರಾಗಿ ಜಲವಾಹಿನಿ ಮ್ಯಾನೇಜ್ಮೆಂಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಧಾರವಾಡ ಕಾರ್ಯನಿರ್ವಹಿಸುತ್ತಿದೆ. ರಸ್ತೆ ಅಭಿವೃದ್ಧಿಯಿಂದ ವಾಹನ ಸಂಚಾರ ಸುಗಮಗೊಳ್ಳುವುದರ ಜೊತೆಗೆ ಧೂಳು ಹಾಗೂ ಮಳೆಗಾಲದ ಸಮಸ್ಯೆಗಳು ಕಡಿಮೆಯಾಗಲಿದ್ದು, ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಉತ್ತಮ ರಸ್ತೆ ಸಂಪರ್ಕ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಬಿ. ಶ್ರೀನಿವಾಸಲು, ಬಿ. ಲೋಕನಾಥ, ಹಿರಿಯ ಪತ್ರಕರ್ತ ಎಂ. ಜಂಬುನಾಥ, ಸೂರಿ, ಶೇಖರ್, ಬಿ. ಗೋವಿಂದ, ಗೋವಿಂದ ನಾಯಕ್, ಚಕ್ರವರ್ತಿ, ಮಾರೆಣ್ಣ, ಹನುಮಂತು, ಡಿಸ್ ಶೇಖರ್, ಶಿವ, ಮೇಕಲಾ ಹನುಮಂತ, ಸೋಮು, ಚಕಾಲಿ ರಾಮಣ್ಣ ಸೇರಿದಂತೆ ಅನೇಕ ಗಣ್ಯರು, ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಈ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದ್ದು, ವಾರ್ಡ್ 33ರ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ ಎಂಬ ವಿಶ್ವಾಸವನ್ನು ಸ್ಥಳೀಯರು ವ್ಯಕ್ತಪಡಿಸಿದರು.