ಬಳ್ಳಾರಿ, 03: ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಾಸುದೇವ ರಾಮ್ ಎಂ. (ಕೆಎಸ್ಪಿಎಸ್) ಅವರಿಗೆ ನಗರದ ಅನಂತಪುರ ರಸ್ತೆಯ ಬಿಡಿಎ ಮೈದಾನದ ಫುಟ್ಬಾಲ್ ಹಾಲ್ನಲ್ಲಿ ಸೋಮವಾರ ಆತ್ಮೀಯ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಾಸುದೇವ ರಾಮ್ ಅವರ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಸರಳತೆ ಹಾಗೂ ಸೇವಾ ಬದ್ಧತೆಯನ್ನು ಶ್ಲಾಘಿಸಿದರು. ಸೇವಾವಧಿಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವುದರ ಜತೆಗೆ ಸಹೋದ್ಯೋಗಿಗಳು ಮತ್ತು ಸಿಬ್ಬಂದಿಯೊಂದಿಗೆ ಸ್ನೇಹಪೂರ್ವಕವಾಗಿ ನಡೆದುಕೊಂಡು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಸುದೇವ ರಾಮ್ ಅವರನ್ನು ಸನ್ಮಾನಿಸಿ, ನಿವೃತ್ತಿ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
ನಂತರ ಮಾತನಾಡಿದ ವಾಸುದೇವ ರಾಮ್, ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯ ಅನುಭವಗಳನ್ನು ಸ್ಮರಿಸಿದ ಅವರು, ಎಲ್ಲರ ಸಹಕಾರ ಮತ್ತು ಆತ್ಮೀಯತೆಯನ್ನು ಜೀವನದುದ್ದಕ್ಕೂ ಮರೆಯುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.