ರಾಯಬಾಗ: ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯಗಳಲ್ಲಿ ತೊಡಗಿದ್ದಾರೆ. ಇಂತಹ ಮಹತ್ವದ ಸಂದರ್ಭದಲ್ಲಿ ಕೃಷಿ ಇಲಾಖೆ ಹಾಗೂ ಸರ್ಕಾರ ರೈತರಿಗೆ ಅಗತ್ಯವಾದ ರಸಗೊಬ್ಬರಗಳನ್ನು ಯಾವುದೇ ಅಡಚಣೆ ಇಲ್ಲದೆ ಪೂರೈಸಬೇಕು ಎಂದು ಉತ್ತರ ಕರ್ನಾಟಕದ ರಾಜ್ಯಾಧ್ಯಕ್ಷ ಬಾಬುಗೌಡ ಪಾಟೀಲ್ ಆಗ್ರಹಿಸಿದ್ದಾರೆ.
ರಸಗೊಬ್ಬರ ವಿತರಣೆಯಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ವಿಶೇಷವಾಗಿ ‘ಲಿಂಕ್ ಸಿಸ್ಟಮ್’ ವಿರುದ್ಧ ಕಿಡಿಕಾರಿದ್ದಾರೆ. ರೈತರು ತಮಗೆ ಬೇಕಾದ ಗೊಬ್ಬರ ಖರೀದಿಸಲು ಹೋದಾಗ, ಜೊತೆಗೆ ಬೇಡವಾದ ಮತ್ತೊಂದು ಗೊಬ್ಬರವನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಮುಖ ಆಗ್ರಹಗಳು:
ರೈತರಿಗೆ ಬೇಕಾದ ಗೊಬ್ಬರವನ್ನು ಮಾತ್ರ ನೀಡಬೇಕು.
‘ಲಿಂಕ್ ಸಿಸ್ಟಮ್’ ಅನ್ನು ತಕ್ಷಣ ರದ್ದುಪಡಿಸಬೇಕು.
ರೈತರ ಮೇಲೆ ಅನಗತ್ಯ ಒತ್ತಡ ಹೇರುವ ಕ್ರಮ ನಿಲ್ಲಿಸಬೇಕು.
ಬೀಜ ಹಾಗೂ ರಸಗೊಬ್ಬರಗಳನ್ನು ಮುಂಚಿತವಾಗಿ ಸಮರ್ಪಕವಾಗಿ ದಾಸ್ತಾನು ಮಾಡಬೇಕು.
ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಇರುವುದರಿಂದ ಕೃಷಿ ಇಲಾಖೆ ಮುಂಚಿತ ಸಿದ್ಧತೆ ಮಾಡಿಕೊಂಡು ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಇನ್ನೂ ಇದೇ ರೀತಿಯ ಸಮಸ್ಯೆಗಳು ಮುಂದುವರಿದರೆ ರೈತರು ಉಗ್ರ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸರ್ಕಾರ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ರೈತರು ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವ ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಕಾರ ನೀಡಬೇಕೇ ಹೊರತು, ಅವೈಜ್ಞಾನಿಕ ನಿಯಮಗಳಿಂದ ರೈತರಿಗೆ ತೊಂದರೆ ಉಂಟುಮಾಡಬಾರದು ಎಂಬುದು ಅವರ ಸ್ಪಷ್ಟ ಅಭಿಪ್ರಾಯವಾಗಿದೆ. ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಮಹೇಶ್ ತವಶಿ ಇದ್ದರು
