ಬಾಗಲಕೋಟೆ, ಜೂನ್ ೧೨ : ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳು ಸಮಪರ್ಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವದರ ಜೊತೆಗೆ ನಕಲಿ ಕೃಷಿ ಪರಿಕರಗಳ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದರು.
ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳು ದೊರೆಯುವಂತೆ ಮಾಡುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ನಕಲಿ ಬಿತ್ತನೆ ಬೀಜ, ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟದಿಂದ ರೈತರು ಅಪಾರ ಪ್ರಮಾಣದಲ್ಲಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ದ ನಿರ್ದಾಕ್ಷಣ್ಯವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ೨೦೨೫-೨೬ನೇ ಸಾಲಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮಾರಾಟ, ದಾಸ್ತಾನು ಮತ್ತು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಒಟ್ಟು ೧೫ ಪ್ರಕರಣ ಹಾಗೂ ಕಳಪೆ ಮಟ್ಟದ ಬೀಜದ ಮಾದರಿಗಳ ಸಂಖ್ಯೆ ೬ ಇದ್ದು, ೬ ಪ್ರಕರಣ ದಾಖಲಿಸಲಾಗಿದೆ. ಕಳಪೆ ಮಟ್ಟದ ರಸಗೊಬ್ಬರ ಮಾದರಿ ಸಂಖ್ಯೆ ೧೭ ಇದ್ದು, ಅದರಲ್ಲಿ ೧೧ರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ೩ ಪ್ರಕರಣಗಳ ಮೇಲೆ ಎಫ್ಐಆರ್ ಕೂಡಾ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅನಧಿಕೃತ ದಾಸ್ತಾನು ಹಾಗೂ ಸಿಐಆರ್ ನೋಂದಣಿಯಾಗದ ಕೀಟನಾಶಕ ಅಂಗಡಿ ಮೇಲೆ ತಲಾ ಒಂದು ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ಸಭೆಗೆ ಮಾಹಿತಿ ನೀಡಿದರು.
ಬೀಜ ರಸಗೊಬ್ಬರ ಮತ್ತು ಕೀಟನಾಶಕಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿಶೇಷ ತಪಾಸಣಾ ತಂಡಗಳು ಮಾರಾಟ ಮಳಿಗೆಗಳ ಮೇಲೆ ನಿರಂತರವಾಗಿ ನಿವಾ ವಹಿಸಬೇಕು. ಕೃಷಿ, ತೋಟಗಾರಿಕೆ, ಸಹಕಾರ, ಕಾನೂನು ಮಾಪನಶಾಸ್ತ್ರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಪರವಾನಗಿ, ದಾಸ್ತಾನು ಹಾಗೂ ಮಾರಾಟ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್.ಎಂ.ಕೋರೆ, ಸಹಕಾರ ಇಲಾಖೆಯ ಉಪ ನಿಬಂಧಕ ದಾನಯ್ಯ ಹಿರೇಮಠ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಬಾಗಲಕೋಟೆ ಕೃಷಿ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಅಗಸನಾಳ, ಜಮಖಂಡಿ ವಿಭಾಗದ ಉಪನಿರ್ದೇಶಕಿ ಮಂಜುಳಾ ಬಸರಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
