ಬಳ್ಳಾರಿ, ಸೆ.05:: ಜಿಲ್ಲೆಯಲ್ಲಿನ ಮಳೆ ಕೊರತೆ ಹಾಗೂ ತೀವ್ರ ಬರ ಪರಿಸ್ಥಿತಿಯಿಂದ ರೈತರು ಮತ್ತು ಗ್ರಾಮೀಣ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ಬಳ್ಳಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಸಂಘಟನೆಯ ಮುಖಂಡರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿವೆ. ಇದರಿಂದ ರೈತರು ಹಾಗೂ ಕೃಷಿ ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಎಲ್ಲ ರೈತರ ವಿವಿಧ ಬ್ಯಾಂಕ್ಗಳ ಸಾಲ ಮನ್ನಾ ಮಾಡಬೇಕು ಹಾಗೂ ಸಿರುಗುಪ್ಪ ತಾಲೂಕನ್ನು ಕೂಡಲೇ ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಕೆಲಸದ ದಿನಗಳನ್ನು ಹೆಚ್ಚಿಸಬೇಕು. ಕಾರ್ಮಿಕರಿಗೆ ಕೂಲಿ ಹಣವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಬೇಕು. ಬರದಿಂದ ಹಾನಿಗೊಳಗಾದ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ, ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಹಾಗೂ ಇತರ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಬರದಿಂದ ಉದ್ಯೋಗಕ್ಕಾಗಿ ಗ್ರಾಮೀಣ ಜನರು ವಲಸೆ ಹೋಗುವುದನ್ನು ತಡೆಯಲು ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.
ಸರ್ಕಾರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬವಿಲ್ಲದೆ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು. ಗ್ರಾಮೀಣ ಜನರಿಗೆ ಉದ್ಯೋಗ ಹಾಗೂ ಅಗತ್ಯ ಪರಿಹಾರ ಸೌಲಭ್ಯಗಳನ್ನು ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ AIKKMS ಬಳ್ಳಾರಿ ಜಿಲ್ಲಾ ಅಧ್ಯಕ್ಷ ಗೋವಿಂದ್ ಹಾಗೂ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು