ಅಳಗವಾಡಿ, ಜೂನ್ 10: ಕಬ್ಬು ಸಾಗಣೆ ಟ್ರ್ಯಾಕ್ಟರ್ ಮಾಲೀಕರಿಗೆ ಪಾವತಿಸಬೇಕಿರುವ ಸುಮಾರು ₹24 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿರುವುದನ್ನು ಖಂಡಿಸಿ ಅಳಗವಾಡಿಯ ಬೀರೇಶ್ವರ ಸಕ್ಕರೆ ಕಾರ್ಖಾನೆ ಕಚೇರಿಗೆ ಬೀಗ ಜಡಿದು ರೈತರು ಹಾಗೂ ರೈತ ಮುಖಂಡರು ಬುಧವಾರ ತೀವ್ರ ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಉತ್ತರ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಬಾಬುಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಟ್ರ್ಯಾಕ್ಟರ್ ಮಾಲೀಕರು, ರೈತರು ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಕಾರ್ಖಾನೆ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಆಡಳಿತ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ತಿಂಗಳುಗಳಿಂದ ಕಬ್ಬು ಸಾಗಣೆ ಟ್ರ್ಯಾಕ್ಟರ್ ಮಾಲೀಕರ ಬಾಕಿ ಬಿಲ್ಗಳನ್ನು ಬಿಡುಗಡೆ ಮಾಡುವಂತೆ ಕಾರ್ಖಾನೆ ಆಡಳಿತಕ್ಕೆ ಮನವಿ ಸಲ್ಲಿಸಲಾಗುತ್ತಿದೆಯಾದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ರೈತ ಮುಖಂಡರು ಆರೋಪಿಸಿದರು. ಕೂಡಲೇ ಬಾಕಿ ಇರುವ ₹24 ಕೋಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಸಂಜೆ ವೇಳೆಯಲ್ಲಿಯೂ ಮುಂದುವರಿದಿದ್ದು, ರೈತರು ಕಾರ್ಖಾನೆ ಆವರಣದಲ್ಲೇ ಅಹೋರಾತ್ರಿ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕಾರ್ಖಾನೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಪ್ರತಿಭಟನಾಕಾರರನ್ನು ಮನವೊಲಿಸಲು ನಡೆಸಿದ ಪ್ರಯತ್ನಗಳು ಫಲಕಾರಿಯಾಗಲಿಲ್ಲ.
ಇಂದು ಕಾರ್ಖಾನೆಯ ಕೋ-ಜನರೇಷನ್ (ವಿದ್ಯುತ್ ಉತ್ಪಾದನಾ ಘಟಕ) ಮುಂಭಾಗದಲ್ಲೂ ಹೋರಾಟವನ್ನು ತೀವ್ರಗೊಳಿಸಲು ಪ್ರತಿಭಟನಾಕಾರರು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಬಾಕಿ ಹಣ ಪಾವತಿಸುವ ಕುರಿತು ಸ್ಪಷ್ಟ ಭರವಸೆ ಸಿಗುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತರು, ಟ್ರ್ಯಾಕ್ಟರ್ ಮಾಲೀಕರು, ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
