ಬಾಗಲಕೋಟೆ, ಮೇ ೦೨ : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ ೪ ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ ೮ ರಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗೆ ಸಕಲ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮತ ಎಣಿಕೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರುಗಳು ಅಂದು ಬೆಳಿಗ್ಗೆ ೭ ಗಂಟೆಗೆ ಹಾಜರಿರಲು ತಿಳಿಸಲಾಗಿದೆ. ಭದ್ರತಾ ಕೊಠಡಿಯನ್ನು ಬೆಳಿಗ್ಗೆ ೭ ಗಂಟೆಗೆ ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುತ್ತಿದೆ ಎಂದರು.
ಇವಿಎಂ ಮತ ಏಣಿಕೆ ಕಾರ್ಯಕ್ಕಾಗಿ ನೆಲ ಮಹಡಿಯ ರೂನಂ.೪ ರಲ್ಲಿ ೧೪ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತ ಪತ್ರಗಳ ಎಣಿಕೆಗಾಗಿ ನೆಲ ಮಹಡಿಯ ೯ರ ಕೊಠಡಿಯಲ್ಲಿ ಒಂದು ಟೇಬಲ್ ಹಾಗೂ ಇಟಿಪಿಬಿಎಸ್ ಸ್ಕ್ಯಾನಿಂಗ್ಕ್ಕಾಗಿ ಕೊಠಡಿ ಸಂ.೯ ರಲ್ಲಿ ಒಂದು ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ತಲಾ ಒಬ್ಬರು ಎಣಿಕೆ ಮೇಲ್ವಿಚಾರಕ, ಎಣಿಕೆ ಸಹಾಯಕ ಹಾಗೂ ಮೈಕ್ರೋ ಅಬ್ಸರವರ ನೇಮಕ ಮಾಡಲಾಗಿದೆ. ಪ್ರತಿ ಟೇಬಲ್ಗೆ ಓರ್ವ ಸಹಾಯಕ ಚುನಾವಣಾಧಿಕಾರಿಗಳು ಇರುತ್ತಾರೆ ಎಂದು ತಿಳಿಸಿದರು.
ಸೇವಾ ಮತದಾರರಿಂದ ಸ್ವೀಕರಿಸಲ್ಪಡುವ ಅಂಚೆ ಮತಪತ್ರಗಳ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಸಲುವಾರಿ ಒಂದು ಟೇಬಲ್ಗಳನ್ನು ಮಾಡಲಾಗಿದ್ದು, ಓರ್ವ ಸ್ಕ್ಯಾನಿಂಗ್ ಮೇಲ್ವಿಚಾರಕರು, ಓರ್ವ ಅಸಿಸ್ಟಂಟ್ ಹಾಗೂ ಇಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಕಾಯ್ದಿಟ್ಟ ಸಿಬ್ಬಂದಿಗಳು ಸೇರಿದಂತೆ ಎಣಿಕೆ ಕಾರ್ಯಕ್ಕೆ ಒಟ್ಟು ೬೩ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಸುತ್ತುವಾರು ಮತ ಎಣಿಕೆಯಾದ ವಿವರವನ್ನು ಪಬ್ಲಿಕ್ ಅಡ್ರೇಸ್ ಸಿಸ್ಟಮ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಭ್ಯರ್ಥಿ, ಅಭ್ಯರ್ಥಿ ಎಜೆಂಟರಿಗೆ ಮತ ಎಣಿಕೆ ಪೂರ್ವ ದಿಕ್ಕಿನಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಮತ ಎಣಿಕೆ ಏಜೆಂಟರಿಗೆ ಮುಖ್ಯ ದ್ವಾರದಲ್ಲಿ ಪ್ರವೇಶ ಇರುವದಿಲ್ಲ. ಸದರಿ ವಾಹನಗಳಿಗೆ ಮುಖ್ಯ ದ್ವಾರದ ೨೦೦ ಮೀಟರ್ ಮುಂಚಿತವಾಗಿ ಇರುವ ಜಿಲ್ಲಾ ಪಶು ಸಂಗೋಪನಾ ಆಸ್ಪತ್ರೆ ಎದುರುಗಡೆ ಹೋಗುವ ರಸ್ತೆ ಮುಖಾಂತರ ಮತ ಎಣಿಕೆ ಕೇಂದ್ರದಿಂದ ಸುಮಾರು ೨೦೦ ಮೀಟರ್ ಅಂತರದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗಳಿಗೆ ಹಾಗೂ ಮಾಧ್ಯಮದವರಿಗೆ ಮಾತ್ರ ಮುಖ್ಯ ದ್ವಾರದಿಂದ ಪ್ರವೇಶವಿರುತ್ತದೆ. ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಷೇದಾಜ್ಞೆ ಜಾರಿ
ಮೇ ೪ರ ಬೆಳಿಗ್ಗೆ ೬ ಗಂಟೆಯಿಂದ ಮೇ ೫ರ ಬೆಳಿಗ್ಗೆ ೬ ಗಂಟೆವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ನ್ನು ಜಾರಿ ಮಾಡಿ ಆದೇಶಿಸಲಾಗಿದೆ. ಅಲ್ಲದೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ೧೦ ಕಿ.ಮೀ ವ್ಯಾಪ್ತಿಯಲ್ಲಿ ಮೇ ೪ರ ಬೆಳಿಗ್ಗೆ ೬ ರಿಂದ ಮಧ್ಯರಾತ್ರಿ ೧೨ ಗಂಟೆವರೆಗೆ ಮಧ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟಲ್, ಕ್ಲಬ್, ಡಾಬಾ ಮತ್ತು ಇನ್ನೀತರ ಸ್ಥಳಗಳಲ್ಲಿ ಮಧ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.